ಚಾಮರಾಜನಗರ: ನಗರದ ಕರಿನಂಜನಪುರದಲ್ಲಿ ಇತ್ತೀಚೆಗೆ ಜೂಜಾಟ ಆಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಮತ್ತೊಬ್ಬ ತಹಶೀಲ್ದಾರ್ ಕಚೇರಿ ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಪೊಲೀಸ್ ಇಲಾಖೆಯ ಎಎಸ್ಐ ಪ್ರದೀಪ್ ಹಾಗೂ ಹೆಡ್ಕಾನ್ಸ್ಟೆಬಲ್ ಮರಿಸ್ವಾಮಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು ಆದೇಶ ಹೊರಡಿಸಿದ್ದರೆ, ತಾಲ್ಲೂಕಿನ ತಹಶೀಲ್ದಾರ್ ಅವರ ಕಾರು ಚಾಲಕ ಕಮಲೇಶ್ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಇಬ್ಬರನ್ನು ಸೇವೆಯಿಂದ ಅಮಾನತು ಮಾಡಿರುವುದನ್ನು ಎಸ್ಪಿ ದಿವ್ಯಾ ಸಾರಾ ಥಾಮಸ್ ಹಾಗೂ ತಮ್ಮ ಚಾಲಕ ಸೇವೆಯಿಂದ ಅಮಾನತುಗೊಂಡಿರುವುದನ್ನು ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ ಅವರು ‘ಪ್ರಜಾವಾಣಿ’ಗೆ ದೃಢಪಡಿಸಿದ್ದರು.
ಇದೇ 21ರಂದು ಕರಿನಂಜನಪುರದ ಮನೆಯೊಂದರಲ್ಲಿ ಜೂಜಾಟ ನಡೆಸುತ್ತಿದ್ದ 20 ಮಂದಿಯನ್ನು ಚಾಮರಾಜನಗರ ಪೂರ್ವ ಠಾಣೆಯ ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದ್ದರು. ಇವರಲ್ಲಿ ಈ ಮೂವರು ಸರ್ಕಾರಿ ನೌಕರರು ಸೇರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.