
ಚಾಮರಾಜನಗರ: ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೆರಿಸಬೇಕು, ಸ್ಥಳೀಯ ರೈತರಿಗೆ ಜಿಲ್ಲೆಯ ಗಡಿಯಲ್ಲಿ ಟೋಲ್ ವಿನಾಯಿತಿ ನೀಡಬೇಕು, ಗಡಿ ಭಾಗದ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸುವರ್ಣಾವತಿ ಜಲಾಶಯದ ಸಮೀಪದ ಟೋಲ್ ಕೇಂದ್ರದ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಅಧ್ಯಕ್ಷ ಮಂಡಳಿ ಸದಸ್ಯರು ಹೊನ್ನೂರು ಪ್ರಕಾಶ್ ಮಾತನಾಡಿ, ಕಬ್ಬಿಗೆ ವೈಜ್ಞಾನಿಕ ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ವಾರದಿಂದ ರೈತರು ಬೀದಿಗಳಿದು ಹೋರಾಟ ಮಾಡುತ್ತಿದ್ದರೂ ಸರ್ಕಾರ ಸ್ಪಂದಿಸದಿರುವುದು ಖಂಡನೀಯ. ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಅಟ್ಟಗೂಳಿಪುರ ಬಳಿಯ ಸುವರ್ಣಾವತಿ ಜಲಾಶಯ ಸಮೀಪದ ಟೋಲ್ನಲ್ಲಿ ಸ್ಥಳೀಯ ರೈತರಿಂದ ಟೋಲ್ ಸಂಗ್ರಹ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು, ರೈತರು ಪ್ರತಿನಿತ್ಯ ಬೆಳೆದ ಬೆಳೆಯನ್ನು ತಮಿಳುನಾಡು ಹಾಗೂ ಚಾಮರಾಜನಗರದ ಮಾರುಕಟ್ಟೆಗೆ ವಾಹನಗಳಲ್ಲಿ ಕೊಂಡೊಯ್ಯುತ್ತಿದ್ದು ಟೋಲ್ ಭರಿಸುವುದು ಆರ್ಥಿಕ ಹೊರೆಯಾಗಿದೆ. 20 ರಿಂದ 30 ಕಿ.ಮೀ ವ್ಯಾಪ್ತಿಯಲ್ಲಿ ಸಂಚರಿಸುವ ಸ್ಥಳೀಯ ರೈತರಿಗೆ ಟೋನ್ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.
ತಮಿಳುನಾಡು ಹಾಗೂ ಕರ್ನಾಟಕ ಗಡಿಯ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಸಂಚಾರಕ್ಕೆ ಯೋಗ್ಯವಾಗಿಲ್ಲ. ತಾಳವಾಡಿ–ಪುಣಜೂರು ನಡುವಿನ ಒಂದೂವರೆ ಕಿ.ಮೀ ರಸ್ತೆಯಲ್ಲಿ ಅಡಿಯುದ್ದದ ಗುಂಡಿಗಳು ಬಿದ್ದಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಗಡಿಯಲ್ಲಿ ತಮಿಳುನಾಡಿಗೆ ಸೇರಿರುವ ರಸ್ತೆಗಳು ಗುಣಮಟ್ಟದಿಂದ ಕೂಡಿದ್ದು ಕರ್ನಾಟಕದ ಗಡಿಯೊಳಗಿನ ರಸ್ತೆಗಳು ಮಾತ್ರ ಸಂಪೂರ್ಣ ಹದಗೆಟ್ಟಿದೆ. ಜನಪ್ರತಿನಿಧಿಗಳ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕೆಎಸ್ಆರ್ಟಿಸಿ ಬಸ್ಗಳು ಶಾಲಾ ಸಮಯಕ್ಕೆ ಸಂಚರಿಸುತ್ತಿಲ್ಲ, ಪರಿಣಾಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರತಿನಿತ್ಯ ಬಸ್ಗಾಗಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪಲು ಸಾಧ್ಯವಾಗದೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಕೂಡಲೇ ಗ್ರಾಮಗಳಿಂದ ನಗರ ಹಾಗೂ ಪಟ್ಟಣಗಳಿಗೆ ಶಾಲಾ ಕಾಲೇಜು ಸಮಯಕ್ಕೆ ಬಸ್ ಓಡಿಸಬೇಕು ಎಂದು ಹೊನ್ನೂರು ಪ್ರಕಾಶ್ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.