ಹನೂರು: ಕಾವೇರಿ ವನ್ಯಧಾಮದ ಕೌದಳ್ಳಿ ವನ್ಯಜೀವಿ ವಲಯದಲ್ಲಿ ಗಂಡಾನೆಯೊಂದು ಮೃತಪಟ್ಟಿದೆ.
ಆನೆಗೆ 60 ವರ್ಷವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೌದಳ್ಳಿ ವಲಯದ ದಂಟಳ್ಳಿ ಶಾಖೆಯ ದಂಟಳ್ಳಿ ಗಸ್ತಿನ ಕುಲುಮಾವಿನ ಕೆರೆಯಲ್ಲಿ ಇದೇ ತಿಂಗಳ 1ರಂದು ನಿತ್ರಾಣಗೊಂಡ ಸ್ಥಿತಿಯಲ್ಲಿ ಗಂಡಾನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿಗೆ ಕಾಣಸಿಕ್ಕಿತ್ತು. ಸಿಬ್ಬಂದಿ ಅದರ ಮೇಲೆ ನಿಗಾ ಇಟ್ಟಿದ್ದರು. ಸೋಮವಾರ ದಂಟಳ್ಳಿ ಗಸ್ತಿನ ತಾಳಟ್ಟಿ ಅರಣ್ಯ ಪ್ರದೇಶದಲ್ಲಿ ಅದು ಮೃತಪಟ್ಟಿರುವುದು ತಿಳಿದು ಬಂದಿದೆ.
ಮಂಗಳವಾರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಂಕರಾಜು ಹಾಗೂ ವಲಯ ಅರಣ್ಯಾಧಿಕಾರಿ ವಿನಯ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಶು ವೈದ್ಯರ ಸಹಾಯದಿಂದ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯ ಸಂಸ್ಕಾರ ನಡೆಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.