ಗುಂಡ್ಲುಪೇಟೆ: ತಾಲ್ಲೂಕಿನ ಅರೇಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭೋತ್ಸವಕ್ಕೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಕ್ಕಳಿಗೆ ಪುಸ್ತಕ ವಿತರಿಸುವ ಮೂಲಕ ಚಾಲನೆ ನೀಡಿದರು. ಜೊತೆಗೆ ಸ್ಮಾರ್ಟ್ ಕ್ಲಾಸ್ ಆರಂಭಕ್ಕೆ ಟಿ.ವಿಯನ್ನು ಸಹ ನೀಡಿದರು.
ಗ್ರಾಮೀಣ ಪ್ರದೇಶ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಅಂಗನವಾಡಿ ಕೇಂದ್ರಗಳಲ್ಲೆ ಎಲ್ಕೆಜಿ ಮತ್ತು ಯುಕೆಜಿಯನ್ನು ಸರ್ಕಾರ ಆರಂಭಿಸಿದೆ. ಈ ಮೂಲಕ ಪೋಷಕರಿಗೆ ಸಾವಿರಾರು ರೂಪಾಯಿ ಡೊನೇಷನ್ ನೀಡಿ ಮಕ್ಕಳನ್ನು ಖಾಸಗೀ ಶಾಲೆಗಳಿಗೆ ಸೇರಿಸುವುದು ತಪ್ಪಿದಂತಾಗಿದೆ. ಜೊತೆಗೆ ಈ ಕಾರ್ಯಕ್ರಮದಿಂದ ಬಡ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ತಾಲ್ಲೂಕಿನ ವಿವಿಧ ಅಂಗನವಾಡಿಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಕ್ಕೆ 145 ಟಿ.ವಿಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕೆಲಸ ಶ್ಲಾಘನೀಯವಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಅಂಗನವಾಡಿ ಕೇಂದ್ರಗಳು ದುರಸ್ತಿಯಾಗಬೇಕಾಗಿದೆ. ಜೊತೆಗೆ ಕೆಲವೆಡೆ ಹೊಸ ಕಟ್ಟಡ ನಿರ್ಮಾಣ ಅಗತ್ಯವಿದೆ. ಈಗಾಗಲೇ ಇವುಗಳನ್ನು ಪಟ್ಟಿ ಮಾಡಿ ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಸಿಡಿಪಿಒ ಹೇಮಾವತಿ ಮಾತನಾಡಿ, ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭ ಮಾಡಲಾಗುತ್ತಿದೆ. ತಾಲ್ಲೂಕಿನಲ್ಲಿ ಒಂದೇ ಗ್ರಾಮದಲ್ಲಿ ಒಂದಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರ ಇರುವ 75 ಅಂಗನವಾಡಿಗಳಲ್ಲಿ ಪ್ರಾರಂಭಿಕವಾಗಿ ಎಲ್ಕೆಜಿ ಮತ್ತು ಯುಕೆಜಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ 307 ಕೇಂದ್ರಗಳಲ್ಲಿ ಶುರುವಾಗಲಿದೆ. ಈ ಸಂಬಂಧ ಈಗಾಗಲೇ ಎಲ್ಲಾ ಅಂಗನವಾಡಿ ಶಿಕ್ಷಕಿಯರು ಹಾಗೂ ಸಹಾಯಕಿಯರಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಸಕ್ರಮ 2.0 ಅಡಿ ಕೇಂದ್ರ ಸರ್ಕಾರದಿಂದ ಸ್ಮಾರ್ಟ್ ಕ್ಲಾಸ್ ಆರಂಭಕ್ಕೆ ಪ್ರಾರಂಭಿಕವಾಗಿ 145 ಅಂಗನವಾಡಿ ಕೇಂದ್ರಗಳಿಗೆ ಟಿವಿ ವಿತರಣೆ ಮಾಡಲಾಗಿದ್ದು, ಈ ಮೂಲಕ ಸ್ಮಾರ್ಟ್ ಕ್ಲಾಸ್ ಮೂಲಕ ಮಕ್ಕಳಿಗೆ ಬೋಧನೆ, ಕಲಿಕೆಗಳ ಬಗ್ಗೆ ತಿಳಿಸಲಾಗುವುದು. ಇಲಾಖೆಯು ಮುಂದಿನ ದಿನಗಳಲ್ಲಿ ರೆಪ್ರಿಜರೇಟರ್, ಶುದ್ಧ ಕುಡಿಯುವ ನೀರಿನ ಘಟಕ, ಆಟಿಕೆ ಸಾಮಾನು, ಬಟ್ಟೆ, ಪಠ್ಯ ಪುಸ್ತಕ, ಶೂ ವಿತರಣೆಗೆ ಕ್ರಮ ವಹಿಸಿದೆ ಎಂದು ತಿಳಿಸಿದರು.
ಅರೇಪುರ ಗ್ರಾಮದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರವನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಉದ್ಘಾಟಿಸಿದರು. ಈ ವೇಳೆ ಅಂಗನವಾಡಿ ಶಿಕ್ಷಕಿ ಸುವರ್ಣ, ರಾಷ್ಟ್ರೀಯ ಪೋಷಣ್ ಅಭಿಯಾನದ ತಾಲ್ಲೂಕು ಸಮನ್ವಯಾಧಿಕಾರಿ ಸಂತೋಷ್, ಗ್ರಾ.ಪಂ ಸದಸ್ಯ ಮಹದೇವಕುಮಾರ್, ವೆಂಕಟನಾಯಕ, ಗೌಡಿಕೆ ಶಂಕರಪ್ಪ, ಜಯಣ್ಣ, ಗ್ರಾ.ಪಂ ಮಾಜಿ ಅಧ್ಯಕ್ಷರಾದ ಚೈತ್ರ ಮಲ್ಲಿಕಾರ್ಜುನ್, ನಂದೀಶ್, ಮಹೇಶ್ ಸೇರಿದಂತೆ ಹೊರೆಯಾಲ ಭಾಗದ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.