ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಇಬ್ಬರನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಭ್ರಮರಾಂಬ ಬಡಾವಣೆಯ ಮಂಜುನಾಥ್ ಹಾಗೂ ಪ್ರೇಮ್ ಬಂಧಿತರು. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ.
ಅಂಬೇಡ್ಕರ್ ಬೀದಿಯ ನಿವಾಸಿ ನಟರಾಜು ಅವರು ನೀಡಿರುವ ದೂರಿನ ಅನ್ವಯ, ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಇಬ್ಬರ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಇಬ್ಬರನ್ನೂ ಬಂಧಿಸಿದ್ದಾರೆ.
‘ಮಂಜುನಾಥ್ ಹಾಗೂ ಪ್ರೇಮ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಹಾಗೂ ತಮ್ಮನ್ನೂ ನಿಂದಿಸಿದ್ದಾರೆ ಎಂದು ನಟರಾಜು ಅವರು ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಇಬ್ಬರನ್ನೂ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ’ ಎಂದು ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.