ADVERTISEMENT

ಗುಂಡ್ಲುಪೇಟೆ: ರಾಜ್ಯದ ಇಬ್ಬರು ಅರಣ್ಯ ಸಿಬ್ಬಂದಿಗೆ ರಾಷ್ಟ್ರೀಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 22 ಜುಲೈ 2023, 15:52 IST
Last Updated 22 ಜುಲೈ 2023, 15:52 IST
ಅರಣ್ಯ ಇಲಾಖೆ ಸಿಬ್ಬಂದಿ
ಅರಣ್ಯ ಇಲಾಖೆ ಸಿಬ್ಬಂದಿ   

ಗುಂಡ್ಲುಪೇಟೆ: ಅರಣ್ಯ ಸಂರಕ್ಷಣೆ ಕಾರ್ಯದಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಇಲಾಖೆಯ ಮುಂಚೂಣಿ ಕಾರ್ಯಕರ್ತರಿಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಬಂಡೀಪುರ ಹಾಗೂ ಕಾಳಿ ಹುಲಿ ಸಂರಕ್ಷಿತ ಪ್ರದೇಶಗಳ ತಲಾ ಒಬ್ಬರು ಸಿಬ್ಬಂದಿ ಆಯ್ಕೆಯಾಗಿದ್ದಾರೆ. 

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗ ಗುಂಡ್ರೆ ವಲಯದಲ್ಲಿ ಅರಣ್ಯ ರಕ್ಷಕರಾಗಿರುವ ಆನಂದ್ ಹಾಗೂ ಉತ್ತರ ಕನ್ನಡದ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಕುಂಬಾರವಾಡದಲ್ಲಿ ಉಪ ವಲಯ ಅರಣ್ಯ ಅಧಿಕಾರಿಯಾಗಿರುವ ವಿ.ವೀರಾಂಜನೇಯ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 

ಇದೇ 29ರಂದು ಉತ್ತರಾಖಂಡದ ಕಾರ್ಬೆಟ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಯಲಿರುವ ಜಾಗತಿಕ ಹುಲಿ ದಿನದ ಸಮಾರಂಭದಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 

ADVERTISEMENT

ಇತ್ತೀಚೆಗೆಷ್ಟೇ ಪ್ರತಿಷ್ಠಿತ ‘ಗಜ ಗೌರವ’ ಪ್ರಶಸ್ತಿಗೆ ಬಂಡೀಪುರದ ಪಶು ವೈದ್ಯ ಡಾ.ಮಿರ್ಜಾ ವಸೀಂ ಅವರು ಆಯ್ಕೆಯಾಗಿದ್ದರು. 

‘ನಮ್ಮ ವೈದ್ಯರು ಹಾಗೂ ಸಿಬ್ಬಂದಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಬಂದಿರುವುದರಿಂದ ಬಂಡೀಪುರ ಹುಲಿ ಯೋಜನೆಯ ಗೌರವ ಇನ್ನಷ್ಟು ಹೆಚ್ಚಾಗಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಡಾ.ಪಿ.ರಮೇಶ್‌ಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.