ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಇಬ್ಬರು ಕೊರೊನಾ ವೈರಸ್ ಸೋಂಕಿತರು ಮೃತಪಟ್ಟಿದ್ದಾರೆ. ಒಬ್ಬರು ಕೋವಿಡ್ ಕಾರಣದಿಂದ ಮೃತಪಟ್ಟಿದ್ದರೆ, ಮತ್ತೊಬ್ಬರು ಬೇರೆ ಕಾರಣದಿಂದ ಪ್ರಾಣ ಕಳೆದುಕೊಂಡಿದ್ದಾರೆ.
ತಾಲ್ಲೂಕಿನ ಬಡಗಲಪುರ ಗ್ರಾಮದ 62 ವರ್ಷ ವಯಸ್ಸಿನ ಪುರುಷ, ಸೆ.17ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಮೃತಪಟ್ಟಿದ್ದಾರೆ.
ಹೃದಯಾಘಾತ ಆಗಿ ಸೆ.26ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಹನೂರು ತಾಲ್ಲೂಕಿನ ಹಲಗಾಪುರದ 70 ವರ್ಷದ ಮಹಿಳೆಗೆ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಮೃತಪಟ್ಟವರ ಸಂಖ್ಯೆ 61ಕ್ಕೆ ಹಾಗೂ ಕೋವಿಡ್ಯೇತರ ಕಾರಣದಿಂದ ನಿಧನರಾದವರ ಸಂಖ್ಯೆ 28ಕ್ಕೆ ಏರಿದೆ.
ಸೋಮವಾರ 61 ಮಂದಿಗೆ ಕೋವಿಡ್ 19 ಇರುವುದು ದೃಢಪಟ್ಟಿದೆ. 41 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 3,886 ಪ್ರಕರಣಗಳು ವರದಿಯಾಗಿವೆ. 3,146 ಮಂದಿ ಸೋಂಕು ಮುಕ್ತರಾಗಿದ್ದಾರೆ. 651 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 310 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 45 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ಜಿಲ್ಲೆಯಲ್ಲಿ 666 ಮಂದಿಯ ಗಂಟಲು ದ್ರವದ ಮಾದರಿ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 612 ಮಂದಿಯ ವರದಿ ನೆಗೆಟಿವ್ ಬಂದಿವೆ. 60 ಮಂದಿ ಸೋಂಕು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.