ಚಾಮರಾಜನಗರ: ಯಳಂದೂರು ತಾಲ್ಲೂಕಿನ ಆದರ್ಶ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಇರುವುದು ದೃಢಪಟ್ಟಿದೆ.
ಆರೋಗ್ಯ ಇಲಾಖೆ ಸಿಬ್ಬಂದಿ ಮೂರು ದಿನಗಳ ಹಿಂದೆ ಶಾಲೆಯಲ್ಲಿ ಮಕ್ಕಳನ್ನು ಆರೋಗ್ಯ ತಪಾಸಣೆ ಪರೀಕ್ಷೆಗೆ ಒಳಪಡಿಸಿದಾಗ ಒಬ್ಬ ವಿದ್ಯಾರ್ಥಿಗೆ ಕೋವಿಡ್ ದೃಢಪಟ್ಟಿತ್ತು. ಆ ಬಳಿಕ ತರಗತಿಯ ಎಲ್ಲ ವಿದ್ಯಾರ್ಥಿಗಳ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಶುಕ್ರವಾರ ಇನ್ನೊಬ್ಬ ವಿದ್ಯಾರ್ಥಿಗೆ ಸೋಂಕು ಇರುವುದು ದೃಢಪಟ್ಟಿದೆ.
‘ಮಕ್ಕಳ ಆರೋಗ್ಯ ಪರೀಕ್ಷೆಗಾಗಿ ತೆರಳಿದ್ದಾಗ ರ್ಯಾಂಡಮ್ ಆಗಿ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿದಾಗ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್ ಆಗಿರುವುದು ಕಂಡು ಬಂತು. ಎರಡು ದಿನಗಳ ನಂತರ ಇನ್ನೊಬ್ಬ ವಿದ್ಯಾರ್ಥಿಗೆ ಕೋವಿಡ್ ಇರುವುದು ಖಚಿತವಾಗಿದೆ’ ಎಂದು ತಾಲ್ಲೂಕಿನ ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಅವರು ಹೇಳಿದರು.
ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ತಿರುಮಲಾಚಾರಿ ಅವರು, ‘ಇಬ್ಬರಿಗೆ ಕೋವಿಡ್ ದೃಢಪಟ್ಟಿರುವುದರಿಂದ ಸೋಮವಾರದವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ. ಶಾಲೆಯ ಆವರಣ ಹಾಗೂ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ’ ಎಂದು ಹೇಳಿದರು.
ಶಾಲೆಯಲ್ಲಿ 6ರಿಂದ 10ನೇ ತರಗತಿಯವರೆಗೆ ಪಾಠಗಳು ನಡೆಯುತ್ತಿವೆ. ಒಟ್ಟು 398 ವಿದ್ಯಾರ್ಥಿಗಳಿದ್ದಾರೆ. 9 ಮತ್ತು 10ನೇ ತರಗತಿ ಬೆಳಗಿನ ಹೊತ್ತು ನಡೆದರೆ, ಉಳಿದ ತರಗತಿಗಳನ್ನು ಮಧ್ಯಾಹ್ನದ ಬಳಿಕ ಮಾಡಲಾಗುತ್ತಿದೆ. ಕೋವಿಡ್ ಕಾರಣಕ್ಕೆ ಇನ್ನೂ ಎಲ್ಲ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿಲ್ಲ. 350ರಷ್ಟು ಮಕ್ಕಳು ಬರುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.