ಕೊಳ್ಳೇಗಾಲ: ತಾಲ್ಲೂಕಿನಲ್ಲಿ ಒಂದೇ ದಿನ ಮೂರು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಒಬ್ಬರು ಹಾವು ಕಡಿದು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರಲ್ಲಿ ಇಬ್ಬರು ವಿದ್ಯಾರ್ಥಿಗಳು. ಇನ್ನೊಬ್ಬರು ಗೃಹಿಣಿ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ: ತಾಲ್ಲೂಕಿನ ಮುಳ್ಳೂರು ಗ್ರಾಮದ ಮಮತಾ ಎಂಬ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಯಳಂದೂರುಆದರ್ಶ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಮತಾ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ.
ಮೂರು ದಿನಗಳಿಂದ ಮುಳ್ಳೂರಿನ ಮನೆಯಲ್ಲಿದ್ದ ವಿದ್ಯಾರ್ಥಿನಿ, ಮಂಗಳವಾರ ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಸಾವಿಗೆ ಯಾರು ಕಾರಣವಲ್ಲ ಎಂದು ಮರಣ ಪತ್ರದಲ್ಲಿ ಬರೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಿಯು ವಿದ್ಯಾರ್ಥಿ ಆತ್ಮಹತ್ಯೆ: ನಗರದ ಲಿಂಗಣಾಪುರದ ಮನೆಯಲ್ಲಿ ಬೆಂಗಳೂರಿನ ಪಿಯು ವಿದ್ಯಾರ್ಥಿ ನಿತೀಶ್ ರಾಜ್ (16) ಎಂಬಾತ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರಿನ ನಿವಾಸಿಯಾಗಿದ್ದ ನಿತೀಶ್, ನಗರದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದುಪೊಲೀಸರು ತಿಳಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹಿಣಿ ಆತ್ಮಹತ್ಯೆ: ಇಲ್ಲಿನ ದೇವಾಂಗ ಪೇಟೆಯ ಚೌಡೇಶ್ವರಿ ಗುಡಿ ಬೀದಿಯಲ್ಲಿ ಗೃಹಿಣಿಯೊಬ್ಬರು ತಮ್ಮ ನಿವಾಸದಲ್ಲಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೂವಿನ ಅಲಂಕಾರದ ಕೆಲಸ ಮಾಡುವ ರಮೇಶ್ ಎಂಬುವವರ ಪತ್ನಿ ಗೀತಾ (26) ಆತ್ಮಹತ್ಯೆ ಮಾಡಿಕೊಂಡವರು. ದಂಪತಿಗೆ ಆರು ವರ್ಷದ ಹೆಣ್ಣುಮಗು ಇದೆ.
ಗೀತಾ ಅವರಿಗೆ ಪದೇ ಪದೇ ಹೊಟ್ಟೆನೋವು ಕಾಡುತ್ತಿದ್ದು, ಇದರಿಂದಾಗಿ ಮನನೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಾವು ಕಚ್ಚಿ ವ್ಯಕ್ತಿ ಸಾವು
ತಾಲ್ಲೂಕಿನ ಟಗರಪುರ ಮೋಳೆ ಗ್ರಾಮದಲ್ಲಿ ರೈತ ಉಮೇಶ್ (36) ಎಂಬುವವರು ಹಾವು ಕಚ್ಚಿ ಮೃತಪಟ್ಟಿದ್ದಾರೆ.
ಮಂಗಳವಾರ ರಾತ್ರಿ ಮೋಳೆ ಗ್ರಾಮದ ಹೊರವಲಯದ ಜಮೀನಿಗೆ ನೀರು ಬಿಡಲು ಹೋದಾಗ ನಾಗರಹಾವು ಕಚ್ಚಿದೆ. ತಕ್ಷಣ ಮನೆಗೆ ಬಂದು ಬಂದು ಕುಟುಂಬಸ್ಥರಿಗೆ ವಿಷಯ ತಿಳಿಸಿದರು. ತಕ್ಷಣವೇ ಅವರನ್ನು ಕೊಳ್ಳೇಗಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ, ಯಳಂದೂರು ತಾಲ್ಲೂಕಿನ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.