ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗದ ನುಗು ವನ್ಯಜೀವಿ ವಲಯದಲ್ಲಿ ಭಾನುವಾರ ಮೂರು ಹುಲಿ ಮರಿಗಳು ಪತ್ತೆಯಾಗಿದ್ದು, ಅದರಲ್ಲಿ ಒಂದು ಸ್ಥಳದಲ್ಲಿಯೇ ಮೃತಪಟ್ಟಿದೆ. ಮತ್ತೊಂದು ಚಿಕಿತ್ಸೆಗೆ ಸ್ಪಂದಿಸದೆ ಮೈಸೂರಿನ ಮೃಗಾಲಯದಲ್ಲಿ ಮೃತಪಟ್ಟಿದೆ.
ಶವಪರೀಕ್ಷೆ ನಡೆಸಿದ್ದು, ಹಸಿವಿನಿಂದ ಮೃತಪಟ್ಟಿರುವುದು ತಿಳಿದುಬಂದಿದೆ.
ಮರಿಗಳು ಶೋಚನೀಯ ಸ್ಥಿತಿಯಲ್ಲಿ ಇರುವುದನ್ನು ಗಮನಿಸಿದ ಸಿಬ್ಬಂದಿ, ಹಿರಿಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದು ಮೃಗಾಲಯಕ್ಕೆ ಕಳುಹಿಸಿಕೊಟ್ಟರು. ಬದುಕುಳಿದ ಗಂಡು ಹುಲಿ ಮರಿಯ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಸಹಾಯಕ ವಲಯ ಅರಣ್ಯಾಧಿಕಾರಿ ಕೆ.ಪರಮೇಶ್ ತಿಳಿಸಿದ್ದಾರೆ.
‘ಹುಲಿ ಮರಿಗಳು ಪತ್ತೆಯಾದ ಸ್ಥಳದಲ್ಲಿ ಕೂಂಬಿಂಗ್ ನಡೆಸಿ ತಾಯಿ ಹುಲಿಯ ಹೆಜ್ಜೆ ಗುರುತು ಪತ್ತೆ ಮಾಡಲಾಗಿದೆ. ತಾಯಿ ಹುಲಿಯ ಪತ್ತೆಗೆ ಶೋಧನ ಕಾರ್ಯ ಪ್ರಗತಿಯಲ್ಲಿದೆ. ಇದಕ್ಕಾಗಿ ಕ್ಯಾಮೆರಾ ಅಳವಡಿಸಿ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ’ ಎಂದು ಹುಲಿ ಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.