ADVERTISEMENT

ಚಾಮರಾಜನಗರ: ಸಂತೇಮರಹಳ್ಳಿಗೆ ಭಾನುವಾರ ಭೇಟಿ ನೀಡಲಿರುವ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 16:25 IST
Last Updated 4 ಡಿಸೆಂಬರ್ 2021, 16:25 IST
ಯಡಿಯೂರಪ್ಪ
ಯಡಿಯೂರಪ್ಪ   

ಚಾಮರಾಜನಗರ: ಬಿಜೆಪಿ ಮುಖಂಡ, ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ (ಡಿ.5) ಸಂತೇಮರಹಳ್ಳಿಗೆ ಬರಲಿದ್ದು, ವಿಧಾನ ಪರಿಷತ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

‘ಸಂತೇಮರಹಳ್ಳಿಯ ಮಲ್ಲಿಕಾರ್ಜುನ ಕಲ್ಯಾಣ ಮಂ‍ಟಪದಲ್ಲಿ ನಡೆಯಲಿರುವ, ಪಕ್ಷದ ಅಭ್ಯರ್ಥಿ ರಘು (ಕೌಟಿಲ್ಯ) ಪರ ನಡೆಯುವ ಚುನಾವಣಾ ಪ್ರಚಾರದಲ್ಲಿ ಯಡಿಯೂರಪ್ಪ ಅವರು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ’ ಎಂದು ನಗರಸಭೆಯ ಬಿಜೆಪಿ ಸದಸ್ಯ ಮನೋಜ್‌ ಪಟೇಲ್‌ ಅವರು ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

ADVERTISEMENT

‘ರಘು ಕೌಟಿಲ್ಯ ಅವರು ಕಳೆದ ಬಾರಿ ಕಡಿಮೆ ಮತಗಳ ಅಂತರದಲ್ಲಿ ಸೋತಿದ್ದರು. ಸರಳ ಹಾಗೂ ಸಜ್ಜನ ರಾಜಕಾರಣಿ ಆಗಿರುವ ಅವರಿಗೆ ಈ ಬಾರಿ ಮತದಾರರು ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಸೋಮಣ್ಣ ಪ್ರಚಾರ ಮಾಡಲಿ: ನಗರಸಭಾ ಸದಸ್ಯ ಸಿ.ಎಂ.ಶಿವರಾಜ್ ಅವರು ಮಾತನಾಡಿ, ‘ಸಚಿವ ವಿ.ಸೋಮಣ್ಣ ಹಾಗೂ ಬಿಜೆಪಿ ಮುಖಂಡ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರು ಪ್ರಚಾರ ಮಾಡಿದರೆ ಪಕ್ಷದ ಅಭ್ಯರ್ಥಿ ರಘು ಕೌಟಿಲ್ಯ ಅವರಿಗೆ ಸುಲಭ ಗೆಲುವಾಗಲಿದೆ. ವಿ.ಸೋಮಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಅಪಾರ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಮತ ಬ್ಯಾಂಕ್ ಹೊಂದಿದ್ದಾರೆ. ಆದ್ದರಿಂದ ವಿ.ಸೋಮಣ್ಣ, ಮಲ್ಲಿಕಾರ್ಜುನಪ್ಪ ಅವರಿಂದ ಪ್ರಚಾರ ಮಾಡಿಸಬೇಕು’ ಎಂದು ಮನವಿ ಮಾಡಿದರು.

ನಗರಸಭಾ ಸದಸ್ಯರಾದ ಮಂಜುನಾಥ್, ಚಂದ್ರಶೇಖರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.