ADVERTISEMENT

ಗ್ರಾಮ ಸರ್ಕಾರಗಳಿಂದ ಗ್ರಾಮ ಸ್ವರಾಜ್ಯ ಸ್ಥಾಪನೆ: ಡಿ.ಆರ್.ಪಾಟೀಲ

ರಾಜ್ಯ ವಿಕೇಂದ್ರಿಕರಣ ಯೋಜನೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಆರ್.ಪಾಟೀಲ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2025, 3:11 IST
Last Updated 8 ನವೆಂಬರ್ 2025, 3:11 IST
ಚಾಮರಾಜನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಆರ್.ಪಾಟೀಲ ಮಾತನಾಡಿದರು
ಚಾಮರಾಜನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಆರ್.ಪಾಟೀಲ ಮಾತನಾಡಿದರು   

ಚಾಮರಾಜನಗರ: ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮಸಭೆಗಳು ವೇದಿಕೆಯಾಗಿ ಕಾರ್ಯ ನಿರ್ವವಹಿಸಬೇಕು ಎಂದು ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಆರ್.ಪಾಟೀಲ ಸಲಹೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ವಿಕೇಂದ್ರಿಕರಣ ಬಲವರ್ಧನೆ ಹಾಗೂ ವಾರ್ಷಿಕ ಕರಡು ಯೋಜನೆ ರೂಪಿಸುವ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ಗ್ರಾಮಗಳಲ್ಲಿರುವ ಪ್ರತಿಯೊಬ್ಬರೂ ಗ್ರಾಮಸಭೆಯ ಸದಸ್ಯರಾಗಿರುತ್ತಾರೆ, ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ವಸತಿ, ವಿದ್ಯುತ್ ಸೇರಿದಂತೆ ಇತರೆ ಮೂಲಸೌಲಭ್ಯಗಳ ಕುರಿತು ಗ್ರಾಮಸಭೆಯಲ್ಲಿ ಚರ್ಚಿಸಬಹುದು ಎಂದರು.

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಗ್ರಾಮಸಭೆಗಳು ಪೂರಕವಾಗಿದ್ದು ಸರ್ಕಾರ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡಿದೆ. ಫಲಾನುಭವಿಗಳ ಆಯ್ಕೆ ನಿರ್ಣಯಗಳು ಗ್ರಾಮಸಭೆಯಲ್ಲಿ ತೆಗೆದುಕೊಳ್ಳಲಾಗುತ್ತದೆ. ಗ್ರಾಮಸಭೆಗಳಲ್ಲಿ ಬಡವರು, ಅವಕಾಶವಂಚಿತರನ್ನು ಗುರುತಿಸಿ ಸರ್ಕಾರದ ಸವಲತ್ತುಗಳನ್ನು ನೀಡಲು ಅಧಿಕಾರಿಗಳು ಮುಂದಾಗಬೇಕು ಎಂದರು.

ADVERTISEMENT

ಗ್ರಾಮ ಪಂಚಾಯಿತಿಗಳು ಗ್ರಾಮಸಭೆಗಳ ಮೂಲಕ ಅನುಷ್ಠಾನಗೊಳಿಸುವ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆ, ಮೇಲ್ವಿಚಾರಣೆ, ಮೌಲ್ಯಮಾಪನ ಸಂದರ್ಭ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಳ್ಳಬೇಕು. ಅಧಿಕಾರಿಗಳು ಗ್ರಾಮಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಗ್ರಾಮೀಣ ಹಾಗೂ ನಗರ ಯೋಜನೆಗಳನ್ನು ರೂಪಿಸುವಲ್ಲಿ ಅಧಿಕಾರಿಗಳು ಸಕ್ರಿಯರಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಸಾಮಾನ್ಯರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಸೂಚಿಸಿದರು.

ಅಧಿಕಾರ ವಿಕೇಂದ್ರಿಕರಣ ಬಲವರ್ಧನೆಗೆ 2027–27ನೇ ಸಾಲಿಗೆ ವಾರ್ಷಿಕ ಕರಡು ಯೋಜನೆ ರೂಪಿಸಬೇಕಾಗಿದ್ದು, ಗ್ರಾಮಗಳ ಮೂಲ ಸಮಸ್ಯೆಗಳನ್ನು ಪರಾಮರ್ಶಿಸಿ ಕ್ರಿಯಾಯೋಜನೆ ತಯಾರಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಗ್ರಾಮಸಭೆಗಳಲ್ಲಿ ಗ್ರಾಮಸ್ಥರಿಂದ ಸಲಹೆಗಳನ್ನು ಸ್ವೀಕರಿಸಬೇಕು, ಕುಂದುಕೊರತೆಗಳಿಗೆ ಕಿವಿಯಾಗಬೇಕು. ಅಧಿಕಾರ ದುರುಪಯೋಗವಾಗದಂತೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿದರೆ ಪಂಚಾಯಿತಿಗಳು ಗ್ರಾಮ ಸರ್ಕಾರಗಳಾಗುತ್ತವೆ, ಗ್ರಾಮ ಸ್ವರಾಜ್ಯ ಸ್ಥಾಪನೆಯಾಗಲಿದೆ ಎಂದರು.

ಗ್ರಾಮಪಂಚಾಯಿತಿಗಳಲ್ಲಿ ನಡೆಯುವ ಗ್ರಾಮಸಭೆಗಳಿಗೆ ಸರ್ಕಾರ ನೀಡಿರುವ ಅಧಿಕಾರವನ್ನು ನಗರಸಭೆ ವ್ಯಾಪ್ತಿಯಲ್ಲಿ ನಡೆಯುವ ವಾರ್ಡ್ ಸಭೆಗಳಿಗೂ ನೀಡಿದೆ. ವಾರ್ಡ್ಗಳ ಪ್ರಗತಿಗಾಗಿ ನಗರ, ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಅಲ್ಲಿನ ಜನರ ಜೊತೆ ಚರ್ಚಿಸಿ ಎಲ್ಲರಿಗೂ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು. ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಾಗದಂತೆ ಗ್ರಾಮಾಭಿವೃದ್ಧಿಗಾಗಿ ತಳಮಟ್ಟದ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಮಿತಿ ಅಧ್ಯಕ್ಷರಾದ ಡಿ.ಆರ್. ಪಾಟೀಲ ಅವರು ತಿಳಿಸಿದರು.

ಸಮಿತಿ ಅಧ್ಯಕ್ಷ ಡಿ.ಆರ್. ಪಾಟೀಲ ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಲಹೆ, ಸೂಚನೆಗಳನ್ನು ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಿ.ಸಿ. ಶೃತಿ, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರಿಧರ್, ವೆಂಕಟೇಶ್, ಜಿಲ್ಲಾಮಟ್ಟದ ಅಧಿಕಾರಿಗಳು, ನಗರ ಸ್ಥಳೀಯ ಸಮಸ್ಥೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು

‘ನಿಯಮಿತವಾಗಿ ನಡೆಯದ ಗ್ರಾಮಸಭೆ’

ಪಂಚಾಯತ್ ರಾಜ್‌ ವ್ಯವಸ್ಥೆ ಕಾಲಕಾಲಕ್ಕೆ ಬದಲಾಗುತ್ತಿದ್ದು ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ ಗ್ರಾಮಸಭೆಗಳಲ್ಲಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಹೆಚ್ಚು ಮಹತ್ವ ಇದೆ. ಆದರೆ ನಿಯಮಿತವಾಗಿ ಗ್ರಾಮಸಭೆಗಳು ನಡೆಯದಿರುವುದು ವಿಷಾದನೀಯ ಸಂಗತಿ. ಗ್ರಾಮಸಭೆಯ ಬಗ್ಗೆ ಜನರಲ್ಲಿ ವಿಶ್ವಾಸ ನಂಬಿಕೆ ಮೂಡಿಸಬೇಕು ಪಂಚಾಯಿತಿ ಅಧಿಕಾರಿಗಳಿಗೆ ಸರ್ಕಾರ ನೀಡಿರುವ ಅಧಿಕಾರ ಸರಿಯಾಗಿ ಬಳಕೆಯಾಗಬೇಕು. ಆಗ ಮಾತ್ರ ಗ್ರಾಮ ಪಂಚಾಯಿತಿಗಳು ಸದೃಢಗೊಳ್ಳಲಿವೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.