ADVERTISEMENT

ಹನೂರು | ಕೆರೆ-ಕಟ್ಟೆ, ಚೆಕ್ ಡ್ಯಾಂ ತುಂಬಿಸಲು ₹ 490 ಕೋಟಿ: ಸುನೀಲ್ ಬೋಸ್

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 6:45 IST
Last Updated 4 ಮಾರ್ಚ್ 2026, 6:45 IST
ಸುನೀಲ್ ಬೋಸ್
ಸುನೀಲ್ ಬೋಸ್   

ಹನೂರು: ‘ಕೊಳ್ಳೇಗಾಲ ತಾಲ್ಲೂಕಿನ ಸರಗೂರು ಗ್ರಾಮದ ಬಳಿ ಕಾವೇರಿ ನದಿಯಿಂದ ನೀರನ್ನು ಎತ್ತಿ ಹನೂರು ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಮತ್ತು ಕುರಟ್ಟಿಹೊಸೂರು ಹಾಗೂ ಸಂತೇಕಾಣೆ ಸುತ್ತಲಿನ ಕೆರೆ-ಕಟ್ಟೆಗಳು, ಚೆಕ್ ಡ್ಯಾಂಗಳನ್ನು ತುಂಬಿಸಲು ಯೋಜನೆ ರೂಪಿಸಲಾಗಿದೆ’ ಎಂದು ಸಂಸದ ಸುನೀಲ್ ಬೋಸ್ ತಿಳಿಸಿದ್ದಾರೆ.

₹ 490 ಕೋಟಿ ಮೊತ್ತಕ್ಕೆ ವಿಸ್ತೃತ ಯೋಜನಾ ವರದಿ ತಯಾರಿಸಲಾಗಿದ್ದು, 2026-27ನೇ ಸಾಲಿನ ಬಜೆಟ್‍ನಲ್ಲಿ ಸೇರ್ಪಡೆಗೊಳಿಸಲು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಲಾಗಿದ್ದು, ಈ ಬಾರಿ ಬಜೆಟ್‌ಗೆ ಸೇರ್ಪಡೆಗೊಳ್ಳುವ ವಿಶ್ವಾಸವಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹನೂರು ತಾಲ್ಲೂಕಿನ ಕುರಟ್ಟಿಹೊಸೂರು, ಕೌದಳ್ಳಿ, ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಮತ್ತು ವಿವಿಧ ಸಂಘಟನೆಗಳು ಕುಡಿಯುವ ನೀರಿನ ತೊಂದರೆ ಮತ್ತು ಅಂತರ್ಜಲ ಮಟ್ಟ ವ್ಯಾಪಕವಾಗಿ ಕುಸಿದಿರುವ ಬಗ್ಗೆ ಗಮನ ಸೆಳೆದಿದ್ದಾರೆ. ಈ ಸಂಬಂಧ ಉಂಟಾಗುತ್ತಿರುವ ಸಾಮಾಜಿಕ ಮತ್ತು ಆರ್ಥಿಕ ತೊಂದರೆಗಳ ಬಗ್ಗೆ ವಿವರಿಸಿದ್ದಾರೆ. ಈ ಸಂಬಂಧ  ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಹಲವು ಹಂತಗಳಲ್ಲಿ ಸಭೆಗಳನ್ನು ನಡೆಸಲಾಗಿದೆ. ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಹನೂರು ತಾಲ್ಲೂಕಿನ ಕುರಟ್ಟಿಹೊಸೂರು, ಕೌದಳ್ಳಿ, ಮಾರ್ಟಳ್ಳಿ, ದಿನ್ನಳ್ಳಿ ಗ್ರಾಮ ಪಂಚಾಯಿತಿಗಳಿಗೆ ಒಳಪಡುವ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಮಗ್ರವಾಗಿ ಡಿಪಿಆರ್‌ ತಯಾರಿಸಲು ಸೂಚನೆ ನೀಡಲಾಗಿತ್ತು ಎಂದು ಹೇಳಿದ್ದಾರೆ.

ADVERTISEMENT

ಈ ಯೋಜನೆಯಡಿ ಕಾವೇರಿ ನದಿಯಿಂದ ನೀರನ್ನು ಎತ್ತಿ, ಅಜ್ಜಿಪುರ ಗ್ರಾಮದ ಬಳಿ ವಿತರಣಾ ತೊಟ್ಟಿಗೆ ನೀರು ಹರಿಸುವುದು ನಂತರ ಗುರುತ್ವಾಕರ್ಷಣಾ ಮೂಲಕ ಉಡುತೊರೆಹಳ್ಳ ಜಲಾಶಯ ಮತ್ತು ದಂಟಳ್ಳಿ, ಕುರಟ್ಟಿಹೊಸೂರು ಹಾಗೂ ಮಾರ್ಟಳ್ಳಿ ಗ್ರಾಮದ ಸುತ್ತಲಿನ ಕೆರೆ ಕಟ್ಟೆ ಹಾಗೂ ರಾಮಾಪುರ-ಕೌದಳ್ಳಿ ಹಳ್ಳದ ಚೆಕ್ ಡ್ಯಾಂಗಳಿಗೆ ನೀರನ್ನು ಹರಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯಿಂದ 9 ಗ್ರಾಮ ಪಂಚಾಯಿತಿಯ ಪರಿಮಿತಿಗೆ ಒಳಪಡುವ ಗ್ರಾಮಗಳಿಗೆ ಪ್ರಯೋಜನವಾಗಲಿದೆ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.