ADVERTISEMENT

ಮಹಿಳೆಯರಿಗೆ ರಾಜಕೀಯದಲ್ಲೂ ಮೀಸಲಾತಿ ಅಗತ್ಯ:ಪುಟ್ಟರಂಗಶೆಟ್ಟಿ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ವಿದ್ಯಾರ್ಥಿನಿಯರು, ಸಾಧಕಿಯರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 8:47 IST
Last Updated 26 ಮಾರ್ಚ್ 2023, 8:47 IST
ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು. ರೋಟರಿ ಅಧ್ಯಕ್ಷ ಮಹದೇವಸ್ವಾಮಿ, ನಗರಸಭಾ ಅಧ್ಯಕ್ಷೆ ಆಶಾ, ಜಿ.ಪಂ. ಉಪ ಕಾರ್ಯದರ್ಶಿ ಸರಸ್ವತಿ ಇತರರು ಇದ್ದರು
ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು. ರೋಟರಿ ಅಧ್ಯಕ್ಷ ಮಹದೇವಸ್ವಾಮಿ, ನಗರಸಭಾ ಅಧ್ಯಕ್ಷೆ ಆಶಾ, ಜಿ.ಪಂ. ಉಪ ಕಾರ್ಯದರ್ಶಿ ಸರಸ್ವತಿ ಇತರರು ಇದ್ದರು   

ಚಾಮರಾಜನಗರ: ‘ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮವಾಗಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿಯೂ ಹೆಚ್ಚು ಅವಕಾಶ ಕಲ್ಪಿಸಬೇಕಾದ ಅಗತ್ಯ ಇದೆ’ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಶನಿವಾರ ಹೇಳಿದರು.

ನಗರದ ರೋಟರಿ ಭವನದಲ್ಲಿ ನೆಹರು ಯುವ ಕೇಂದ್ರ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ, ರೋಟರಿ ಸಂಸ್ಥೆ, ಇನ್ನರ್ ವೀಲ್ ಕ್ಲಬ್, ಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕವಾಗಿ ಕ್ರೀಡಾ ಸೇವಾ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜಕೀಯದಲ್ಲಿ ಮಹಿಳೆಯರಿಗೆ ಇನ್ನಷ್ಟು ಮೀಸಲಾತಿ ನೀಡಬೇಕಾಗಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ನೀಡಿದರೆ ಸಾಲುವುದಿಲ್ಲ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲೂ ನೀಡಬೇಕಾಗಿದೆ. ಆಗ ಮಾತ್ರ ಮಹಿಳೆಯರು ಮುಂದೆ ಬರಲು ಸಾಧ್ಯ’ ಎಂದು ಹೇಳಿದರು.

ADVERTISEMENT

ಬಿಜೆಪಿ ಮುಖಂಡ ಎಂ. ರಾಮಚಂದ್ರ ಮಾತನಾಡಿ, ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಕಲ್ಪಿಸಿದ ಕಾರಣದಿಂದ ಮಹಿಳೆಯರು ನಾಲ್ಕು ಗೋಡೆಗೆ ಸೀಮಿತವಾಗದೆ ಉನ್ನತ ಮಟ್ಟದ ಅಧಿಕಾರಿಗಳಾಗಿ ಬರುತ್ತಿದ್ದಾರೆ’ ಎಂದರು.

ನಗರಸಭಾ ಅಧ್ಯಕ್ಷೆ ಆಶಾ ನಟರಾಜು ಮಾತನಾಡಿ, ‘ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು’ ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಸರಸ್ವತಿ ಮಾತನಾಡಿ, ‘ಮಹಿಳೆಯರ ಯಶಸ್ಸಿಗೆ ಪುರುಷರೂ ಕಾರಣ. ನಾವು ಈ ಮಟ್ಟಕ್ಕೆ ಬೆಳೆಯಲು ನಮ್ಮ ಪೋಷಕರು ನೆರವಾಗಿದ್ದಾರೆ. ಮಹಿಳೆಯರು ಶ್ರಮಜೀವಿಗಳು. ಮಕ್ಕಳಿಗೆ ಶಿಕ್ಷಣ ನೀಡಿ ಅವರನ್ನು ಉತ್ತಮ ಪ್ರಜೆಯಾಗಿ ಮಾಡುವುದು ಎಲ್ಲರ ಕರ್ತವ್ಯ’ ಎಂದರು.

ರೋಟರಿ ಸಂಸ್ಥೆಯ ಅಧ್ಯಕ್ಷ ಕೆಂಪನಪುರ ಮಾದೇವಸ್ವಾಮಿ ಅವರು 20 ಮಂದಿ ವಿದ್ಯಾರ್ಥಿನಿಯರನ್ನು ಗೌರವಿಸಿದರು. 30 ಮಂದಿ ಮಹಿಳೆಯರಿಗೆ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ನಂದಿನಿ ಸುಮನ್ ಗೌರವಿದರು.

ನೆಹರು ಯುವ ಕೇಂದ್ರದ ಸಹನ, ಶಂಕರ್, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ ಬಂಗಾರು, ‌ ಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ನಿರ್ದೇಶಕರಾದ ಪೂಜಾ, ಶ್ವೇತ, ರಂಜಿತ, ಯಶೋಧ, ಅರ್ಪಿತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.