ADVERTISEMENT

ಗ್ರಾಮ ಒನ್: ಯೋಜನೆ ಲಾಭ ಪ್ರತಿಯೊಬ್ಬರಿಗೂ ತಲುಪಿಸಿ: ಜಿಲ್ಲಾಧಿಕಾರಿ ಚಾರುಲತಾ

ತರಬೇತಿ ಕಾರ್ಯಾಗಾರದಲ್ಲಿ ಸಲಹೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 6:53 IST
Last Updated 25 ಜೂನ್ 2022, 6:53 IST
ಗ್ರಾಮ ಒನ್‌ ಯೋಜನೆ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಅವರು ಉದ್ಘಾಟಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ ಇದ್ದರು
ಗ್ರಾಮ ಒನ್‌ ಯೋಜನೆ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಅವರು ಉದ್ಘಾಟಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ ಇದ್ದರು   

ಚಾಮರಾಜನಗರ: ಗ್ರಾಮ ಮಟ್ಟದಲ್ಲಿ ಸರ್ಕಾರ, ಬ್ಯಾಂಕಿಂಗ್ ಸೇವೆಗಳು, ಆರ್.ಟಿ.ಐ ಸೇರಿದಂತೆ ಇನ್ನಿತರ ಸೇವೆಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಮಹತ್ವಾಕಾಂಕ್ಷಿ ಗ್ರಾಮ ಒನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಪ್ರತಿ ಪ್ರಜೆಗೂ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಶುಕ್ರವಾರ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಗ್ರಾಮ ಒನ್ ಯೋಜನೆಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ಗ್ರಾಮ ಒನ್ ಕೇಂದ್ರಗಳು ನಾಗರಿಕರಿಗೆ ವಿವಿಧ ಸರ್ಕಾರಿ ಸೇವೆಗಳು ಮತ್ತು ಯೋಜನೆಗಳ ಸೌಲಭ್ಯ ಪಡೆಯಲು ಸಹಾಯ ಸೇವಾ ವಿತರಣಾ ಮಾರ್ಗವಾಗಿದೆ. ಈ ಕೇಂದ್ರದ ನಿರ್ವಹಣೆ ಮಾಡುವವರಿಗೆ ಮಹತ್ತರ ಹೊಣೆಗಾರಿಕೆ ಇದೆ. ಯೋಜನೆಯ ಅನುಷ್ಠಾನ, ಮೇಲ್ವಿಚಾರಣೆ ಬಗ್ಗೆ ಹೆಚ್ಚು ಮನವರಿಕೆ ಮಾಡಿಕೊಳ್ಳಬೇಕಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.

‘ಚಾಮರಾಜನಗರ ಗಡಿ ಜಿಲ್ಲೆಯಾಗಿದ್ದು, ಅರಣ್ಯ ಪ್ರದೇಶ ಹೆಚ್ಚಿದೆ. ಕಾಡಂಚಿನ ಗ್ರಾಮಗಳ ಜನರು ಸರ್ಕಾರದ ಯೋಜನೆಗಳ ಸವಲತ್ತುಗಳನ್ನು ಪಡೆದುಕೊಳ್ಳುವ ಸಲುವಾಗಿ ಪಟ್ಟಣಕ್ಕೆ ಬರಲು ಸಾರಿಗೆ ವ್ಯವಸ್ಥೆಯ ತೊಂದರೆಯಿದೆ. ಹೀಗಾಗಿ ಆಯಾ ಗ್ರಾಮಗಳಲ್ಲೇ ಸೌಲಭ್ಯ ಸೇವೆಗಳನ್ನು ಪಡೆದುಕೊಳ್ಳಲು ಗ್ರಾಮ ಒನ್ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು’ ಎಂದರು.

ADVERTISEMENT

‘ಕೇಂದ್ರಗಳಲ್ಲಿ ಕೆಲಸ ಮಾಡುವ ನಿರ್ವಾಹಕರು ಸಾರ್ವಜನಿಕರೊಡನೆ ಸ್ನೇಹದಿಂದ ವರ್ತಿಸಬೇಕು. ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಬೇಕು. ಮನೆ ಮನೆಗೆ ತೆರಳಿ ಗ್ರಾಮ ಒನ್ ಸೇವಾ ಸೌಲಭ್ಯದ ಪ್ರಯೋಜನ ಪಡೆಯಲು ಜಾಗೃತಿ ಮೂಡಿಸಬೇಕು’ ಎಂದು ಚಾರುಲತಾ ಹೇಳಿದರು.

ಸೇವಾ ಸಿಂಧು ಯೋಜನಾ ನಿರ್ದೇಶಕ ಬಿ.ಎನ್.ವರಪ್ರಸಾದ್ ರೆಡ್ಡಿ ಮಾತನಾಡಿ, ‘ಗ್ರಾಮ ಒನ್, ರಾಜ್ಯ ಸರ್ಕಾರದ ಮಹತ್ವದ ಯೋಜನೆ. ಗ್ರಾಮ ಒನ್ ಕೇಂದ್ರಗಳಿಂದಾಗಿ ನಿರುದ್ಯೋಗಿ ಯುವಕ ಯುವತಿಯರಿಗೂ ಉದ್ಯೋಗಾವಕಾಶ ದೊರಕಿದಂತಾಗುತ್ತದೆ. ಗ್ರಾಮಗಳ ಮನೆ ಮನೆಗೂ ಯೋಜನೆ ತಲುಪಿಸಲು ಮುಂದಾದರೆ ಯಶಸ್ಸು ಸಿಗಲಿದೆ’ ಎಂದರು.

‘ಗ್ರಾಮ ಒನ್ ಕೇಂದ್ರವನ್ನು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ತೆರೆದಿರಬೇಕು. ಕಂಪ್ಯೂಟರ್, ಸ್ಕ್ಯಾನರ್, ಪ್ರಿಂಟರ್, ಬಯೋಮೆಟ್ರಿಕ್ ದೃಢೀಕರಣ ಸಾಧನ, ಇಂಟರ್ ನೆಟ್ ಸಂಪರ್ಕ, ವಿದ್ಯುತ್ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು. ಬ್ರ್ಯಾಂಡಿಂಗ್ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಸೇವೆಗಳ ಬಳಕೆಯ ಬಗ್ಗೆ ಪೂರ್ಣ ಪ್ರಮಾಣದಲ್ಲಿ ತರಬೇತಿ ಪಡೆಯಬೇಕು’ ಎಂದು ವರಪ್ರಸಾದ್ ರೆಡ್ಡಿ ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಸೇವಾ ಸಿಂಧು ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ನಂಜುಂಡಸ್ವಾಮಿ, ಜಿಲ್ಲಾ ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಗಂಗಾಧರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.