ADVERTISEMENT

ಯುವ ಪೀಳಿಗೆಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಮಂಜುನಾಥ್

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 2:39 IST
Last Updated 8 ಸೆಪ್ಟೆಂಬರ್ 2025, 2:39 IST
ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರ ಗ್ರಾಮದಲ್ಲಿ ಮನೋನಿಧಿ ನರ್ಸಿಂಗ್ ಕಾಲೇಜು ವತಿಯಿಂದ ನಡೆದ ಸಮುದಾಯ ಆರೋಗ್ಯ ಕಾರ್ಯಕ್ರಮವನ್ನು ಪಿಎಸ್‌ಐ ತಾಜುದ್ದೀನ್ ಉದ್ಘಾಟಿಸಿದರು 
ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರ ಗ್ರಾಮದಲ್ಲಿ ಮನೋನಿಧಿ ನರ್ಸಿಂಗ್ ಕಾಲೇಜು ವತಿಯಿಂದ ನಡೆದ ಸಮುದಾಯ ಆರೋಗ್ಯ ಕಾರ್ಯಕ್ರಮವನ್ನು ಪಿಎಸ್‌ಐ ತಾಜುದ್ದೀನ್ ಉದ್ಘಾಟಿಸಿದರು    

ಸಂತೇಮರಹಳ್ಳಿ: ಯುವಕರು ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಿಸಲು ಮುಂದಾಗಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕ ಮಂಜುನಾಥ್ ತಿಳಿಸಿದರು.

ಸಮೀಪದ ಹೆಗ್ಗವಾಡಿಪುರ ಗ್ರಾಮದಲ್ಲಿ ಮನೋನಿಧಿ ನರ್ಸಿಂಗ್ ಕಾಲೇಜು ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಸಮುದಾಯ ಆರೋಗ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಧೂಮಪಾನ ಮತ್ತು ತಂಬಾಕು ಸೇವನೆ ಮಾಡಿದಾಗ ದೇಹದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇಂದಿನ ಯುವ ಪೀಳಿಗೆ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಲು ದುಶ್ಚಟಗಳಿಂದ ದೂರ ಇರಬೇಕು. ಮಾದಕ ವಸ್ತುಗಳನ್ನು ಸೇವಿಸಿದಾಗ ವ್ಯಕ್ತಿಗಳು ಸಮಾಜಕ್ಕೆ ಕಂಟಕವಾಗಿ ಬದುಕುತ್ತಾರೆ. ಜತೆಗೆ ಆರ್ಥಿಕವಾಗಿ ಹಾಗೂ ಸಮಾಜಿಕವಾಗಿ ತೊಂದರೆಗೆ ಒಳಗಾಗಬೇಕಾಗುತ್ತದೆ ಎಂದರು.

ADVERTISEMENT

ಬೀದಿಬದಿ ಆಹಾರ ಪದಾರ್ಥಗಳನ್ನು ಸೇವನೆ ಮಾಡಿದಾಗ ದೇಹವು ಹದಗೆಡುತ್ತದೆ. ಬೀದಿಯಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳಿಗೆ ರುಚಿ ಸಿಗುವ ರಸಾಯನಿಕ ಮಿಶ್ರಣ ಮಾಡಿ ಮಾರಾಟ ಮಾಡುತ್ತಾರೆ. ಬೀದಿಯಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳನ್ನು ಸೇವಿಸಿದಾಗ ರಕ್ತಹೀನತೆ, ಅನೀಮಿಯಾ ಉಂಟಾಗಿ ಹೀಮೋಗ್ಲೋಬಿನ್ ಅಂಶ ಕಡಿಮೆಯಾಗುತ್ತದೆ. ಹೀಗಾಗಿ ಮನೆಯಲ್ಲಿಯೇ ತಯಾರು ಮಾಡುವ ಆಹಾರ ಪದಾರ್ಥಗಳನ್ನು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ ಮಾತನಾಡಿ, ವಾಸ ಮಾಡುವ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿಕೊಂಡಾಗ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಅಭಿವೃದ್ಧಿಯಲ್ಲಿ ಮುಂದೆ ಸಾಗುತ್ತಿರುವ ಪ್ರಸ್ತುತದಲ್ಲಿ ನಾಗರಿಕತೆ ಕಡೆಗೆ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಗ್ರಾಮಗಳ ವಾತಾವರಣದಲ್ಲಿ ಸ್ವಚ್ಛತೆಗೆ ಹೆಚ್ಚು ಗಮನ ಹರಿಸಬೇಕು. ನರ್ಸಿಂಗ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಅತೀ ಹಿಂದುಳಿದ ಗ್ರಾಮೀಣ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿನ ಜನರಿಗೆ ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು. ಇಂತಹ ಕಾರ್ಯಕ್ರಮಗಳು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನಡೆದಾಗ ಆರೋಗ್ಯ ಹಾಗೂ ಸ್ವಚ್ಛತೆ ಸುಧಾರಣೆಯಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾಯಮಣಿ, ಸದಸ್ಯ ಎಚ್.ಎನ್.ಶಿವಕುಮಾರ್, ಮನೋನಿಧಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಸಿನಿನ್ ಸೀವರ್ಗೀಸ್, ಪಿಎಸ್‌ಐ ತಾಜುದ್ಧೀನ್, ರೈತಮುಖಂಡ ಎಚ್.ಸಿ.ಮಹೇಶ್ ಕುಮಾರ್, ಮುಖಂಡ ಎನ್‌ರಿಚ್ ಮಹದೇವಸ್ವಾಮಿ ಹಾಗೂ ತರಬೇತಿ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.