ADVERTISEMENT

ಹರವೆ: ಹಾಸ್ಟೆಲ್‌, ಗ್ರಾ.ಪಂ ಕಚೇರಿಗೆ ಸಿಇಒ ಭೇಟಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2022, 6:10 IST
Last Updated 18 ನವೆಂಬರ್ 2022, 6:10 IST
ಜಿಲ್ಲಾ ಪಂಚಾಯಿಸಿ ಸಿಇಒ ಕೆ.ಎಂ.ಗಾಯಿತ್ರಿ ಅವರು ಬಹುಗ್ರಾಮ ಕುಡಿಯುವ ನೀರು ಯೋಜನೆಯ ನೀರು ಶುದ್ಧೀಕರಣ ಘಟಕವನ್ನು ಪರಿಶೀಲಿಸಿದರು. ಅಧಿಕಾರಿಗಳು ಇದ್ದರು
ಜಿಲ್ಲಾ ಪಂಚಾಯಿಸಿ ಸಿಇಒ ಕೆ.ಎಂ.ಗಾಯಿತ್ರಿ ಅವರು ಬಹುಗ್ರಾಮ ಕುಡಿಯುವ ನೀರು ಯೋಜನೆಯ ನೀರು ಶುದ್ಧೀಕರಣ ಘಟಕವನ್ನು ಪರಿಶೀಲಿಸಿದರು. ಅಧಿಕಾರಿಗಳು ಇದ್ದರು   

ಚಾಮರಾಜನಗರ: ತಾಲ್ಲೂಕಿನ ಹರವೆ ಗ್ರಾಮ ಪಂಚಾಯಿತಿ ಕಚೇರಿ, ಹಾಸ್ಟೆಲ್, ಗ್ರಂಥಾಲಯಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನರೇಗಾ ಯೋಜನೆ, ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್, ಎನ್.ಆರ್.ಎಲ್.ಎಂ, ಅಮೃತ ಗ್ರಾಮ ಪಂಚಾಯಿತಿ ಹಾಗೂ ಇತರೆ ಯೋಜನೆಗಳಡಿ ಅನುಷ್ಠಾನಗೊಳಿಸಲಾಗಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದರು.

ಬಾಪೂಜಿ ಸೇವಾಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಬಗ್ಗೆ ಪರಿಶೀಲಿಸಿ, ಸಕಾಲದಲ್ಲಿ ಸೇವೆಗಳನ್ನು ಸಮರ್ಪಕವಾಗಿ ತಲುಪಿಸಲು ಸೂಚಿಸಿದರು. ತೆರಿಗೆ ಪರಿಷ್ಕರಣೆ ಮಾಡಿ ವಸೂಲಾತಿಗೆ ಕ್ರಮವಹಿಸುವಂತೆ ಹಾಗೂ ಅಪೂರ್ಣಗೊಂಡಿರುವ ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನ (ಆರ್.ಜಿ.ಪಿ.ಎಸ್.ಎ) ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ತುರ್ತು ಕ್ರಮವಹಿಸುವಂತೆ ತಿಳಿಸಿದರು.

ಗ್ರಾಮ ಪಂಚಾಯಿತಿಯ ಗ್ರಂಥಾಲಯಕ್ಕೆ ಭೇಟಿ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಪಟ್ಟ ಪುಸ್ತಕಗಳನ್ನು ಇಡಲು ಹಾಗೂ ಹೆಚ್ಚಿನ ಸದಸ್ಯತ್ವ ನೋಂದಣಿ, ಬಯಲು ಗ್ರಂಥಾಲಯ ಅನುಷ್ಠಾನ ಸಂಬಂಧ ಅಂದಾಜು ಪಟ್ಟಿಯನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಪಿಡಿಒಗೆ ಸೂಚಿಸಿದರು.

ADVERTISEMENT

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಹಾಜರಾತಿಯನ್ನು ವೀಕ್ಷಿಸಿದರು. ಸೌಲಭ್ಯಗಳನ್ನು ಪರಿಶೀಲಿಸಿ ಸ್ವಚ್ಛತೆ ಕಾಪಾಡಲು ಸೂಚಿಸಿದರು.

ವಿದ್ಯಾರ್ಥಿನಿಲಯದಲ್ಲಿ ಗ್ರಂಥಾಲಯ ತೆರೆಯಬೇಕು. ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತಹ ಪುಸ್ತಕಗಳು, ದಿನಪತ್ರಿಕೆಗಳು ಹಾಗೂ ನಿಯತಕಾಲಿಕಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ಹರವೆ ಗ್ರಾಮದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಮನೆ-ಮನೆಗೂ ನಲ್ಲಿ ನೀರು ಸಂಪರ್ಕ ಕಾಮಗಾರಿ ಪರಿಶೀಲಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಇತರೆ ಇತರರು ಇದ್ದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪರಿಶೀಲನೆ

‌ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ ಅವರು ಕೊಳ್ಳೇಗಾಲ ತಾಲ್ಲೂಕಿನ ಸರಗೂರು ಹಾಗೂ ಪಾಳ್ಯಕ್ಕೆ ಗುರುವಾರ ಭೇಟಿ ನೀಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲಿಸಿದರು.

ಸರಗೂರು ಬಳಿಯ ಕಾವೇರಿ ನದಿಯ ಹತ್ತಿರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಿಸುತ್ತಿರುವ ಜಾಕ್‌ವೆಲ್ ಕಾಮಗಾರಿಯನ್ನು ವೀಕ್ಷಿಸಿದರು. ಪಾಳ್ಯ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ಕುಡಿಯುವ ನೀರಿನ ಶುದ್ಧೀಕರಣ ಘಟಕ ಪರಿಶೀಲಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗ ಕಚೇರಿಗೆ ಭೇಟಿ ನೀಡಿ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಡಿ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳ ಪ್ರಗತಿ ಕುರಿತು ಸಭೆ ನಡೆಸಿದರು.

ಯೋಜನೆಗಳಡಿ ಬಾಕಿಯಿರುವ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಹಾಗೂ ಜಲಜೀವನ್ ಮಿಷನ್ 2ನೇ ಹಂತದ ಕಾಮಗಾರಿಗಳನ್ನು ಬೇಗ ಮುಗಿಸುವಂತೆ ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ವಿಭಾಗದ ಇಇ ಗಂಗಾಧರಯ್ಯ, ಎಇಇ ಆನಂದಮೂರ್ತಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.