ಗುಡಿಬಂಡೆ: ತಾಲ್ಲೂಕಿನ ಸೋಮೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಕಡತಗಳ ಕೋಣೆಗೆ ಬೆಂಕಿ ಹಚ್ಚಿ ಸುಟ್ಟಿರುವ ಘಟನೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿ ತಾಲ್ಲೂಕಿನ ಸಿಪಿಐಎಂ ಹಾಗೂ ರೈತಪರ ಸಂಘಟನೆ ಕಾರ್ಯಕರ್ತರು ಶುಕ್ರವಾರವೂ ಧರಣಿ ನಡೆಸಿದರು.
ವಿಷಯ ತಿಳಿದ ಜಿಲ್ಲಾ ಪಂಚಾಯತಿ ಅಧ್ಯಕ್ಷ ಚಿನ್ನಪ್ಪಯ್ಯ ತಾಲ್ಲೂಕು ಪಂಚಾಯತಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ, ಸೋಮೇನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ 13ನೇ ಹಣಕಾಸು ಹಾಗೂ ವಿವಿಧ ಯೋಜನೆಗಳ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿದರು. ಸರಿಯಾದ ದಾಖಲೆ ನೀಡದೆ ಮಾತಿಗಿಳಿದ ಕಾರ್ಯನಿರ್ವಹಣಾಧಿಕಾರಿ ಆರ್.ಇಂದ್ರೇಶ್ ಹಾಗೂ ಲೆಕ್ಕಪರಿಶೋಧಕ ತಿಪ್ಪೇಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡರು.
ಡಿ.16 ರಂದು ಚಿಕ್ಕಬಳ್ಳಾಪುರ ಜಿಲ್ಲಾಪಂಚಾಯತಿಯಲ್ಲಿ ನಡೆಯುವ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸೋಮೇನಹಳ್ಳಿ ಗ್ರಾಮಪಂಚಾಯಿತಿಗೆ ಸಂಬಂಧಿಸಿದ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಒಂದು ವೇಳೆ ವರದಿ ನೀಡುವಲ್ಲಿ ವಿಫಲರಾದರೆ ಕಾರ್ಯನಿರ್ವಹಣಾಧಿಕಾರಿ ಆರ್.ಇಂದ್ರೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಎಚ್ಚರಿಸಿದರು.
ಸೋಮೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ ಕಾರ್ಯದರ್ಶಿ ಮದ್ದರೆಡ್ಡಿಯನ್ನು ಅಮಾನತು ಮಾಡುವುದಾಗಿ ಭರವಸೆ ನೀಡಿದ ಬಳಿಕ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಸಿಐಟಿಯು ಕಾರ್ಯಕರ್ತರು ಧರಣಿ ಹಿಂಪಡೆದರು. ಸೋಮೇನಹಳ್ಳಿ ಗ್ರಾ.ಪಂ ಕಡತಗಳಿಗೆ ಬೆಂಕಿ ಇಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮಂಗಳವಾರ ಉಗ್ರ ಹೋರಾಟ ನಡೆಸುವುದಾಗಿ ಕಾರ್ಯಕರ್ತರು ಇದೇ ವೇಳೆ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಆದಿನಾರಾಯಣರೆಡ್ಡಿ, ಸದಸ್ಯರಾದ ಮುನಿರೆಡ್ಡಿ, ಮಂಜುಳ, ಮದ್ದರೆಡ್ಡಿ ನಾಗರತ್ನ, ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಜಯರಾಮರೆಡ್ಡಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಹೆಚ್.ಪಿ ಲಕ್ಷ್ಮಿನಾರಾಯಣ, ಸೋಮೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು, ದಲಿತ ಹಕ್ಕುಗಳ ಹೋರಾಟ ಸಮಿತಿ ಮುಖಂಡರಾದ ಅಶ್ವತ್ಥಪ್ಪ, ನರಸಿಂಹಮೂರ್ತಿ, ಕರ್ನಾಟಕ ರೈತ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ವರದರಾಜು, ಅಶ್ವತ್ಥರೆಡ್ಡಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.