ADVERTISEMENT

ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2011, 6:40 IST
Last Updated 11 ಅಕ್ಟೋಬರ್ 2011, 6:40 IST

ಚಿಕ್ಕಬಳ್ಳಾಪುರ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯೋಜನೆಗಳ ಅನುಷ್ಠಾನಕ್ಕೆ ಸಹಕಾರ ನೀಡದ ಬ್ಯಾಂಕು ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲು ಕಾನೂನು ತಿದ್ದುಪಡಿಯನ್ನು ಸಹ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ನಾರಾಯಣಸ್ವಾಮಿ ಎಚ್ಚರಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, `ಬ್ಯಾಂಕು ಅಧಿಕಾರಿಗಳು ಸಹ ಕಾರ ನೀಡದಿರುವ ಕುರಿತು ರೈತರಿಂದ ದೂರುಗಳು ಕೇಳಿ ಬರುತ್ತಿವೆ. ರೈತ ರೊಂದಿಗೆ ಸರಿಯಾಗಿ ಸಂವಹನ ನಡೆಸು ತ್ತಿಲ್ಲ ಎಂಬ ಆರೋಪಳಿವೆ. ವಿಶೇಷವಾಗಿ ಸರ್ಕಾರಿ ಸೌಲಭ್ಯಗಳನ್ನು ಜಾರಿಗೆ ತರಲು ಹಿಂದೇಟು ಹಾಕಲಾಗುತ್ತಿದೆ~ ಎಂದರು.

ವೈಶ್ಯ ಬ್ಯಾಂಕ್ ಹೊರತುಪಡಿಸಿ ಇತರ ಎಲ್ಲ ಬ್ಯಾಂಕುಗಳು ಸಹಕರಿಸುತ್ತಿವೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವ ಸ್ಥಾಪಕ ಸುಂದರೇಶ್ ಉತ್ತರಕ್ಕೆ ಪ್ರತಿ ಕ್ರಿಯಿಸಿದ ಸಚಿವರು, `ಪರಿಶಿಷ್ಟ ಜಾತಿ ಮತ್ತು ಪಂಗಡದ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸದ ಬ್ಯಾಂಕ್‌ಗಳು ಮತ್ತು ಅಧಿಕಾರಿಗಳ ವಿರುದ್ಧ  ಕ್ರಿಮಿನಲ್ ಮೊಕದ್ದಮೆ ಹೂಡಿ ಜೈಲಿಗೆ ಕಳುಹಿಸ ಲಾಗುವುದು. ಅಕ್ಟೋಬರ್ 15ರಂದು ನಡೆಯುವ ಬ್ಯಾಂಕು ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗುವುದು~ ಎಂದರು.

ಬೆಳಕು ಯೋಜನೆ ಕುರಿತು ಮಾಹಿತಿ ನೀಡಿದ ಬೆಸ್ಕಾಂ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ರಮೇಶ್ ಮಾತನಾಡಿ, `ಬೆಳಕು ಯೋಜನೆಯಡಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 74 ಸಾವಿರ ಮತ್ತು ಗೌರಿಬಿದನೂರು ತಾಲ್ಲೂಕಿನಲ್ಲಿ 11 ಸಾವಿರ ಸಿಎಫ್‌ಎಲ್ ಬಲ್ಬ್‌ಗಳನ್ನು ವಿತರಿಸಲಾಗಿದೆ. ಇತರ ತಾಲ್ಲೂಕುಗಳಲ್ಲೂ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ~ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿದ್ಯುತ್ ಉಳಿಕೆ ದೃಷ್ಠಿಯಿಂದ ಬೆಳಕು ಯೋಜನೆ ಉತ್ತಮವಾದುದಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ವಸತಿ ಗೃಹಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಸಿಎಫ್‌ಎಲ್ ಬಲ್ಬ್ ಬಳಸುವಂತೆ ಹಾಗೂ ವಾರದ ಒಳಗೆ ಈ ಬದಲಾವಣೆ ಮಾಡುವಂತೆ  ಅಧಿಕಾರಿಗಳಿಗೆ ಸೂಚಿಸಿದರು.

`ಜಿಲ್ಲೆಯ ಎಲ್ಲ ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಮೂರು ವರ್ಷ ಗಳಿಂದ ಬಳಕೆ ಮಾಡಲಾಗುತ್ತಿರುವ ಹೊದಿಕೆ ಮತ್ತು ಹಾಸಿಗೆಗಳನ್ನೇ ಉಪಯೋಗಿಸಲಾಗುತ್ತಿದೆ. ಅವುಗಳನ್ನು ತೆಗೆದು ಹಾಕಿ ಹೊಸ ಹೊದಿಕೆಗಳನ್ನು ಬಳಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ವಸತಿ ಗೃಹಗಳಲ್ಲಿ ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಸಿಎಫ್‌ಎಲ್ ಬಲ್ಬ್‌ಗಳನ್ನು ಅಳವಡಿಸಬೇಕು~ ಎಂದು ಅವರು ತಿಳಿಸಿದರು.

ಶಾಸಕರಾದ ಕೆ.ಪಿ.ಬಚ್ಚೇಗೌಡ, ಡಾ. ಎಂ.ಸಿ.ಸುಧಾಕರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪಯ್ಯ, ಉಪಾಧ್ಯಕ್ಷೆ ಬಿ.ಸಾವಿತ್ರಮ್ಮ, ಜಿಲ್ಲಾಧಿಕಾರಿ ಡಾ.ಎನ್.ಮಂಜುಳಾ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.