ADVERTISEMENT

ಒತ್ತಡಕ್ಕೆ ಮಣಿದು ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2017, 5:55 IST
Last Updated 30 ಅಕ್ಟೋಬರ್ 2017, 5:55 IST

ಚಿಕ್ಕಬಳ್ಳಾಪುರ: ‘ನಾನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲೇ ಬೇಕು ಎಂದು ಕಳೆದ ಎಂಟು ತಿಂಗಳಿನಿಂದ ಜನರು ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಅನೇಕ ಹಳ್ಳಿಗಳಲ್ಲಿ ಅಭೂತಪೂರ್ವ ಬೆಂಬಲ ಕೂಡ ವ್ಯಕ್ತಪಡಿಸಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಗಂಗರೇಕಾಲುವೆ ನಾರಾಯಣಸ್ವಾಮಿ ಹೇಳಿದರು.

ತಾಲ್ಲೂಕಿನ ಗಂಗರೇಕಾಲುವೆಯಲ್ಲಿ ನ. 2 ರಂದು ಜಲಗಣಪತಿ ಸೇವಾ ಟ್ರಸ್ಟ್ ಹಮ್ಮಿಕೊಂಡಿರುವ ಉಚಿತ ಸಾಮೂಹಿಕ ವಿವಾಹಕ್ಕೆ ಹೆಸರು ನೋಂದಾಯಿಸಿಕೊಂಡ ವಧು–ವರರಿಗೆ ಮುಹೂರ್ತದ ಸಮವಸ್ತ್ರ, ಕಾಲುಂಗುರ ವಿತರಿಸಿ ಮಾತನಾಡಿದರು.

‘ಚುನಾವಣೆಯಲ್ಲಿ ಗೆದ್ದು ಸುಮ್ಮನೆ ರಾಜಕೀಯ ಮಾಡಿದರೆ ವ್ಯರ್ಥ. ಏನಾದರೂ ಸಾಧಿಸಬೇಕು ಎನ್ನುವ ಛಲದಿಂದ ಚುನಾವಣೆಗೆ ಸ್ಪರ್ಧಿಸಲು ಉದ್ದೇಶಿಸಿದ್ದೇನೆ. ಒಂದೊಮ್ಮೆ ಚುನಾವಣೆಯಲ್ಲಿ ಗೆದ್ದರೆ ಮೊದಲು ತಾಲ್ಲೂಕಿನ ಎಲ್ಲಾ ಕೆರೆಗಳ ಹೂಳು ತೆಗೆಸಲು ಕ್ರಮಕೈಗೊಳ್ಳುತ್ತೇನೆ. ಕೈಗಾರಿಕೆಗಳನ್ನು ಸ್ಥಾಪಿಸಿ ನಿರುದ್ಯೋಗಿ ಯುವ ಜನರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಕೆಲಸ ಮಾಡುವೆ’ ಎಂದು ಹೇಳಿದರು.

ADVERTISEMENT

‘ನ. 1 ರಂದು ಜಲಗಣಪತಿ ದೇವಾಲಯದ 11ನೇ ವಾರ್ಷಿಕೋತ್ಸವ ಮತ್ತು ಕಳಸ ಪೂಜಾ ಕಾರ್ಯಕ್ರಮ ನಡೆಯಲಿದೆ. ನ.2 ರಂದು 86 ಜೋಡಿಗಳ ಸಾಮೂಹಿಕ ವಿವಾಹ ನೆರವೇರಲಿದೆ. ಸಂಸದ ವೀರಪ್ಪ ಮೊಯಿಲಿ, ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.