ADVERTISEMENT

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2011, 10:40 IST
Last Updated 3 ಸೆಪ್ಟೆಂಬರ್ 2011, 10:40 IST

ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರ ಪ್ರತಿನಿಧಿಸುವ ಇಬ್ಬರು ಸಂಸದರನ್ನು ಮತ್ತು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ನಾಲ್ವರು ಜನಪ್ರತಿನಿಧಿಗಳನ್ನು ಆಹ್ವಾನಿಸದೇ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವೇಶ್ವರಯ್ಯ ಉನ್ನತ ತಾಂತ್ರಿಕ ಸಂಸ್ಥೆಯ (ವಿಐಎಟಿ) ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಸಿದರು.

ಸಂಸದರಾದ ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಶಾಸಕರಾದ ಎನ್.ಸಂಪಂಗಿ, ಎನ್.ಎಚ್.ಶಿವಶಂಕರ ರೆಡ್ಡಿ, ಡಾ. ಎಂ.ಸಿ.ಸುಧಾಕರ ಮತ್ತು ವಿ.ಮುನಿಯಪ್ಪ ಅವರ ಹೆಸರುಗಳನ್ನು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಪ್ರಕಟಿಸಲಾಗಿಲ್ಲ. ಅಲ್ಲದೇ ಕಾರ್ಯ ಕ್ರಮಕ್ಕೂ ಸಹ ಆಹ್ವಾನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

`ವಿಶ್ವೇಶ್ವರಯ್ಯ ಉನ್ನತ ತಾಂತ್ರಿಕ ಸಂಸ್ಥೆ ಸ್ಥಾಪಿಸುವ ಬಗ್ಗೆ ವೀರಪ್ಪ ಮೊಯಿಲಿ ಆಗಾಗ್ಗೆ ಹೇಳುತ್ತಿದ್ದರು. ಸಂಸ್ಥೆಯ ಸ್ಥಾಪನೆ ಬಗ್ಗೆ ಅವರು ಈಗಲೂ ಆಶಾಭಾವನೆ ಹೊಂದಿದ್ದಾರೆ. ಆದರೆ ಅವರನ್ನು ಆಹ್ವಾನಿಸದೇ ಕಾರ್ಯಕ್ರಮ ನಡೆಸುವ ಮೂಲಕ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆಂಜನಪ್ಪ ಅಸಮಧಾನ ವ್ಯಕ್ತಪಡಿಸಿದರು.

`ಜಿಲ್ಲೆಯ ಮುಖಂಡರು, ಸಂಸದರು  ಮತ್ತು ಶಾಸಕರನ್ನು ಕರೆಯದೇ ಕಾರ್ಯಕ್ರಮ ನಡೆಸುತ್ತಿರುವುದು ಖಂಡನೀಯ ಎಂದು ಹೇಳಿದರು.

ಘಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಡಾ. ವಿ.ಎಸ್.ಆಚಾರ್ಯ ಮತ್ತು ವಿಐಎಟಿ ಕುಲಪತಿ ಡಾ. ಎಚ್.ಮಹೇಶಪ್ಪ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.