ADVERTISEMENT

ಗೌರಿಬಿದನೂರು ಪಟ್ಟಣಕ್ಕೆ ಹೇಮಾವತಿ ನೀರು: ರೆಡ್ಡಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 8:28 IST
Last Updated 7 ಸೆಪ್ಟೆಂಬರ್ 2013, 8:28 IST

ಗೌರಿಬಿದನೂರು: ಕುಡಿಯುವ ನೀರಿನ ಸಮಸ್ಯೆ ದಿನದಿನಕ್ಕೂ ಉಲ್ಬಣಿಸುತ್ತಿದೆ. ಆದ್ದರಿಂದ ಮಧುಗಿರಿ ಮತ್ತು ಕೊರಟಗೆರೆ ತಾಲ್ಲೂಕಿನವರೆಗೆ ಬಂದಿರುವ ಹೇಮಾವತಿ ನೀರನ್ನು ಕೊಳವೆ ಮೂಲಕ ಪಟ್ಟಣಕ್ಕೆ ಹರಿಸುವ ಯೋಜನೆ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಲಾಗಿದೆ ಎಂದು ವಿಧಾನಸಭಾ ಉಪಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.

ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ನಗರೋತ್ಥಾನ ಯೋಜನೆಯಡಿ 4 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳುತ್ತಿರುವ ವಿವಿಧ ಕಾಮಗಾರಿಗಳಿಗೆ ಶುಕ್ರವಾರ ಪುರಸಭೆ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಸತತವಾಗಿ ನಾಲ್ಕು ವರ್ಷಗಳಿಂದ ತಾಲ್ಲೂಕಿನಲ್ಲಿ ಬರಗಾಲವಿದೆ. ಪಟ್ಟಣದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದ್ದು, ಮಧುಗಿರಿ ಮತ್ತು ಕೊರಟಗೆರೆ ತಾಲ್ಲೂಕಿನವರೆಗೆ ಬಂದಿರುವ ಹೇಮಾವತಿ ನೀರನ್ನು ಇಲ್ಲಿಗೂ ಹರಿಸುವ ಆಲೋಚನೆ ಇದೆ. ಜತೆಗೆ ಮಂಚೇನಹಳ್ಳಿಯ ದಂಡಿಗಾನಹಳ್ಳಿ ಜಲಾಶಯದಿಂದ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಯ ಸರ್ವೇ ಕಾರ್ಯಕ್ಕೆ 5 ಲಕ್ಷ ರೂಪಾಯಿ ಬಿಡುಗಡೆಯಾಗಿದೆ ಎಂದರು.

ADVERTISEMENT

ಬರ್ಜಾನುಕುಂಟೆ ಬಳಿ ಖರೀದಿಸಿದ 40 ಎಕರೆ ಪ್ರದೇಶದಲ್ಲಿ ವಸತಿ ರಹಿತರಿಗೆ ನಿವೇಶನ ನೀಡಲಾಗುವುದು. ಗೌರಿಬಿದನೂರು ಪುರಸಭೆ ವ್ಯಾಪ್ತಿಯನ್ನು ವಿಸ್ತರಿಸಿ ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸುವ ಯೋಜನೆಗೆ ನೀಲ ನಕ್ಷೆ ತಯಾರಿಸಲಾಗಿದೆ. ಕೇಂದ್ರ ಸರ್ಕಾರದ ಯುಜಿಡಿ ಯೋಜನೆಯಡಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ ಮಾಡಲಾಗುವುದು ಎಂದರು.

ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕಿ ಡಾ.ಎನ್.ಮಂಜುಳಾ, ಜಿಲ್ಲಾ ನಗರಾಭಿವೃದ್ಧಿ ನಿರ್ದೇಶಕ ಎನ್.ನಾಗರಾಜಶೆಟ್ಟಿ, ತಹಶೀಲ್ದಾರ್ ಡಾ.ಎನ್.ಭಾಸ್ಕರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎನ್.ನಿರಂಜನ್, ಪುರಸಭೆ ಮುಖ್ಯಾಧಿಕಾರಿ ಹನುಮಂತೇಗೌಡ, ಪುರಸಭೆ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.