ADVERTISEMENT

ಟ್ಯಾಂಕ್ ನಿರ್ಮಾಣದಲ್ಲಿ ಅಕ್ರಮ: ತನಿಖೆಗೆ ಸಮಿತಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2013, 8:36 IST
Last Updated 17 ಡಿಸೆಂಬರ್ 2013, 8:36 IST

ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧೆಡೆ ಟ್ಯಾಂಕ್ ನಿರ್ಮಾಣಕ್ಕೆ ಹಣ ಪಡೆಯಲಾಗಿದೆ. ಕಾಮಗಾರಿಯಲ್ಲಿ ಅಕ್ರಮ ಕಂಡು ಬಂದಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಸಮಿತಿ ರಚಿಸಿ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
೧೩ನೇ ಹಣಕಾಸಿನ ಯೋಜನೆಯಲ್ಲಿ ಜಿಲ್ಲೆಯ ಎಲ್ಲ ೨೫ ಕ್ಷೇತ್ರಗಳಿಗೆ ₨ ೩.೬ ಕೋಟಿಯನ್ನು ಸಮನಾಗಿ ಹಂಚಲಾಗುವುದು ಎಂದು ಘೋಷಿಸಿದರು.

ಬಾಗೇಪಲ್ಲಿ ತಾಲ್ಲೂಕು ಜೂಲಪಾಳ್ಯದಲ್ಲಿ ವೈದ್ಯರು ಅನಧಿಕೃತ ಗೈರು ಹಾಜರಾಗುತ್ತಿದ್ದಾರೆ. ಇದರಿಂದ ರೋಗಿಗಳಿಗೆ  ತೊಂದರೆಯಾಗುತ್ತಿದೆ. ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರನ್ನು ನೇಮಿಸಬೇಕೆಂದು ಸದಸ್ಯರು ಕೋರಿದರು.

ಜೂಲಪಾಳ್ಯಕ್ಕೆ ಮತ್ತೊಬ್ಬ ವೈದ್ಯರನ್ನು ಹಂಗಾಮಿಯಾಗಿ ನೇಮಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಭರವಸೆ ನೀಡಿದರು.

ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲಾ ಮತ್ತು ನಗರಗೆರೆ ಗ್ರಾಮಗಳಿಗೆ ಅಂಬುಲೆನ್ಸ್ ಒದಗಿಸಲು ಸಭೆ ಅನುಮೋದಿಸಿತು.
ಜಿಲ್ಲೆಯಲ್ಲಿ ೮೦ ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ನಗರದಲ್ಲಿಯೇ 9 ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲ ಘಟಕಗಳನ್ನು ಸುಸ್ಥಿತಿಯಲ್ಲಿಡಬೇಕು ಮತ್ತು ಉತ್ತಮ ಗುಣಮಟ್ಟದ ನೀರು ಸರಬರಾಜು ಮಾಡಲು ಕ್ರಮ ವಹಿಸಬೇಕು ಎಂದು ಜಿ.ಪಂ. ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ಸೂಚಿಸಿದರು.

ಶಿಡ್ಲಘಟ್ಟ ಶಾಸಕ ಎಂ.ರಾಜಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ­ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.