ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟದ ಪ್ರಾಕೃತಿಕ ಸೌಂದರ್ಯ ಸಂರಕ್ಷಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ನಂದಿ ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ತೀರ್ಮಾನ ತೆಗೆದುಕೊಂಡಿದೆ.
ಬೆಟ್ಟಕ್ಕೆ ತಿಂಗಳಿಗೆ ಸುಮಾರು 80 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗೆ ಬರುವವರೆಲ್ಲ ಪ್ಲಾಸ್ಟಿಕ್ ಕೈ ಚೀಲ, ತಟ್ಟೆ, ಲೋಟ, ಚಮಚ, ನೀರು, ತಂಪು ಪಾನೀಯ ಬಾಟಲ್ಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿರುತ್ತಾರೆ. ಇದರಿಂದ ಬೆಟ್ಟದ ಪರಿಸರದಲ್ಲಿ ದಿನೇ ದಿನೇ ಮಾಲಿನ್ಯ ಉಂಟಾಗಲು ಆರಂಭಿಸಿತ್ತು.
ಇದನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ನಂದಿ ಗಿರಿಧಾಮವನ್ನು ‘ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶ’ವನ್ನಾಗಿ ಘೋಷಿಸಿ ಈಗಾಗಲೇ ಆದೇಶ ಹೊರಡಿಸಿದೆ. ಜತೆಗೆ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅವುಗಳನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತುಕ್ರಮದ ಎಚ್ಚರಿಕೆ ನೀಡಿದೆ.
ಇನ್ನು ಮುಂದೆ ನಂದಿ ಬೆಟ್ಟಕ್ಕೆ ಹೋಗುವವರು ಪ್ಲಾಸ್ಟಿಕ್ನಿಂದ ತಯಾರಿಸಿದ ಬ್ಯಾಗ್, ಭಿತ್ತಿಪತ್ರ, ತೋರಣ, ಪ್ಲೇಕ್ಸ್, ಬಾವುಟ, ತಟ್ಟೆ, ಲೋಟ, ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಹಾಳೆ, ಥರ್ಮೋಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ನಿಂದ ತಯಾರಾದಂತಹ ವಸ್ತುಗಳನ್ನು ತೆಗೆದುಕೊಂಡು ಹೋಗಿ ಎಲ್ಲೆಂದರಲ್ಲಿ ಬಿಸಾಡುವುದು, ಮಾರಾಟ ಮಾಡುವುದು ನಿಷೇಧಿಸಲಾಗಿದೆ.
ಒಂದೊಮ್ಮೆ ಯಾರಾದರೂ ಮಾರ್ಗಸೂಚಿ ಉಲ್ಲಂಘಿಸಿ ಬೆಟ್ಟಕ್ಕೆ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ತೆಗೆದುಕೊಂಡು ಹೋದರೆ ಅವುಗಳನ್ನು ಸ್ಥಳದಲ್ಲಿಯೇ ಮುಟ್ಟುಗೋಲು ಹಾಕಿಕೊಂಡು ₹ 1 ಸಾವಿರ ದಂಡ ವಿಧಿಸಲಾಗುತ್ತದೆ. ಜತೆಗೆ ಕ್ರಿಮಿನಲ್ ಪ್ರಕರಣ ಹೂಡಲಾಗುತ್ತದೆ. ಬೆಟ್ಟದಲ್ಲಿರುವ ಮಳಿಗೆಗಳಲ್ಲಿ ಖರೀದಿಸಿದ ನೀರಿನ ಬಾಟಲಿಗಳು ಮತ್ತು ತಿಂಡಿ ತಿನಿಸುಗಳ ಪೊಟ್ಟಣಗಳನ್ನು ನಿಗದಿತ ಸ್ಥಳದಲ್ಲಿ ಹಾಕಬೇಕು.
ಗಿರಿಧಾಮದಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಲು ಪ್ರವೇಶ ದ್ವಾರದಲ್ಲಿಯೇ ಪ್ಲಾಸ್ಟಿಕ್ ಪತ್ತೆಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಅವರು ಪ್ರವಾಸಿಗರನ್ನು, ವಾಹನಗಳನ್ನು ಪರಿಶೀಲಿಸಿದ ನಂತರವಷ್ಟೇ ಒಳಗೆ ಪ್ರವೇಶಿಸಲು ಅನುಮತಿಸಲಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.