ಚಿಂತಾಮಣಿ: ಬೆಂಗಳೂರು ವಿಶ್ವ ವಿದ್ಯಾಲಯವು ಪದವಿ ಪರೀಕ್ಷೆಗಳ ಪರೀಕ್ಷಾ ಶುಲ್ಕ ಏರಿಕೆ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಪ್ರತಿಭಟಿಸಿ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಮಹಿಳಾ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಕಾಲೇಜಿನಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿದರು ನಡೆಸಿದರು. ಬೆಂಗಳೂರು ವಿಶ್ವವಿದ್ಯಾನಿಲಯ ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ಪರೀಕ್ಷಾ ಶುಲ್ಕ ಏರಿಕೆ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಪದವಿ ಕಾಲೇಜುಗಳ 2, 4 ಮತ್ತು 6ನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ₨ 187ರಿಂದ ₨ 613ಕ್ಕೆ ಏರಿಸಲಾಗಿದೆ. ಈ ಹಿಂದೆ ವಾರ್ಷಿಕ ₨ 11 ಸಾವಿರಕ್ಕಿಂತ ಕಡಿಮೆ ಆದಾಯ ಹೊಂದಿರುವ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಬಿ.ಎಸ್.ಸಿ, ಬಿ.ಕಾಂಗೆ ₨187, ಬಿ.ಬಿ.ಎಂ ₨320 ಶುಲ್ಕ ನಿಗದಿಯಾಗಿತ್ತು. ಇದೀಗ ವಿ.ವಿ. ಪರೀಕ್ಷಾ ಶುಲ್ಕವನ್ನು ಮೂರ್ನಾಲ್ಕು ಪಟ್ಟು ಹೆಚ್ಚಿಸಿದೆ ಎಂದು ಎಬಿವಿಪಿ ಜಿಲ್ಲಾ ಘಟಕದ ಸಂಚಾಲಕ ಮಂಜುನಾಥರೆಡ್ಡಿ ಟೀಕಿಸಿದರು.
ಬಿ.ಎ. ತರಗತಿಯ 2, 4, 6ನೇ ಸೆಮಿಸ್ಟರ್ ಶುಲ್ಕವನ್ನು ₨ 187ರಿಂದ ₨ 472ಕ್ಕೆ ಏರಿಸಲಾಗಿದೆ. ಸಸಡುವ ಬಹುತೇಕ ವಿದ್ಯಾರ್ಥಿಗಳು ಕೃಷಿ, ಕೂಲಿ ಕಾರ್ಮಿಕ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಶುಲ್ಕ ಏರಿಕೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ದೂರಿದರು.
ವಿದ್ಯಾರ್ಥಿಗಳು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಸಾಂಕೇತಿಕವಾಗಿ ಧರಣಿ ನಡೆಸಿದರು. ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ಗ್ರೇಡ್–2 ತಹಶೀಲ್ದಾರ್ ಶ್ರೀನಿವಾಸಶೆಟ್ಟಿ ಮನವಿ ಸ್ವೀಕರಿಸಿ ಸರ್ಕಾರ ಮತ್ತು ವಿಶ್ವವಿದ್ಯಾಲಯಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದರು.
ವಿದ್ಯಾರ್ಥಿ ಮುಖಂಡರಾದ ಸುರೇಶ್, ನವಾಜ್, ಆರ್ಶಿಯಾ, ಲಾವಣ್ಯ, ಶ್ವೇತಾ, ಸೌಮ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.