ಚಿಂತಾಮಣಿ: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಯೋಜನೆಗಳ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವುದರ ಜತೆಗೆ ಕ್ರಿಯಾ ಯೋಜನೆ ತಯಾರಿಸುವಾಗ ಪಾರದರ್ಶಕತೆಗೆ ಹೆಚ್ಚು ಒತ್ತು ನೀಡುವಂತೆ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ರಂಗನಾಥಸ್ವಾಮಿ ಸೂಚಿಸಿದರು.
ತಾಲ್ಲೂಕಿನ ಹೆಬ್ಬರಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉದ್ಯೋಗ ಖಾತ್ರಿ ಯೋಜನೆಯ 2011-12 ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸುವ ಸಭೆ ಉದ್ಘಾಟಿಸಿ ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿಗೆ ಉದ್ಯೋಗ ಖಾತ್ರಿ ಯೋಜನೆಯು ಬಹಳ ಸಹಕಾರಿಯಾಗಿದ್ದು, ಯೋಜನೆಯ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ಪಾರದರ್ಶಕತೆಯಿಂದ ಅನುಷ್ಠಾನಕ್ಕೆ ತರುಲು ಪ್ರಾಮಾಣಿಕವಾಗಿ ಕ್ರಮಗಳನ್ನು ಕೈಗೊಳ್ಳಬೇಕು. ಯೋಜನೆಯ ಸದುಪಯೋಗ ಪಡೆದು ಗ್ರಾಮಗಳಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.
ಸಂಪನ್ಮೂಲ ವ್ಯಕ್ತಿ ಮಾತನಾಡಿ, ಸಂಪೂರ್ಣ ನೈರ್ಮಲ್ಯ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿ ಗ್ರಾಮದ ಪ್ರತಿಯೊಂದು ಕುಟುಂಬವು ಒಂದೊಂದು ಶೌಚಾಲಯ ನಿರ್ಮಿಸಿಕೊಳ್ಳಬೇಕು. ಸರ್ಕಾರ ಸಹಾಯಧನವನ್ನು ನೀಡುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ 100 ಕ್ಕೂ ಹೆಚ್ಚು ಅರ್ಜಿಗಳನ್ನು ನೀಡಿ ತಮ್ಮ ತಮ್ಮ ಗ್ರಾಮಗಳಲ್ಲಿ ಇರುವ ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳ ಗಮನಸೆಳೆದರು. ತಾ.ಪಂ.ಸದಸ್ಯ ಸುಬ್ರಮಣಿ, ಮಾಜಿ ಅಧ್ಯಕ್ಷ ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಪ್ಪ, ಉಪಾಧ್ಯಕ್ಷ ಗೋಪಾಲರೆಡ್ಡಿ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣಸ್ವಾಮಿ ಕಾರ್ಯದರ್ಶಿ ಉಮಾ, ಮುಖಂಡರಾದ ಹಾದಿಗೆರೆ ಚೌಡರೆಡ್ಡಿ, ನಾರಾಯಣಸ್ವಾಮಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.