ADVERTISEMENT

ಬಾಗೇಪಲ್ಲಿ ದೂಳುಮಯ; ಶಾಸಕರಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2011, 6:15 IST
Last Updated 3 ಫೆಬ್ರುವರಿ 2011, 6:15 IST

ಬಾಗೇಪಲ್ಲಿ: ಮುಖ್ಯರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಆರೋಪಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಬುಧವಾರ ಪಟ್ಟಣದ ಪುರಸಭಾ ಕಚೇರಿ ಎದುರು ರಸ್ತೆ ತಡೆ ನಡೆಸಿ, ಶಾಸಕ ಎನ್.ಸಂಪಂಗಿ ಅವರಿಗೆ ಮುತ್ತಿಗೆ ಹಾಕಿದರು.

ಪಟ್ಟಣದ ಪುರಸಭಾ ಮುಂಭಾಗದಲ್ಲಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು, ‘ಪಟ್ಟಣದ ನಿವಾಸಿಗಳು ದೂಳು ಮತ್ತು ಮಾಲಿನ್ಯದಿಂದ ತೊಂದರೆ ಎದುರಿಸುತ್ತಿದ್ದರೂ ಶಾಸಕರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನಿರ್ಲಕ್ಷ್ಯ ತೋರುತ್ತಿದ್ದಾರೆ’ ಎಂದು ಆರೋಪಿಸಿದರು.

ಜಯಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯ್‌ಕುಮಾರ್ ಮಾತನಾಡಿ, ‘ಬಾಗೇಪಲ್ಲಿ ನ್ಯಾಷನಲ್ ಕಾಲೇಜಿನಿಂದ ರಾಷ್ಟ್ರೀಯ ಹೆದ್ದಾರಿ-7 ಹಾಗೂ ಗೂಳೂರು ರಸ್ತೆಯಲ್ಲಿ ಮೊಣಕಾಲುದ್ದ ಗುಂಡಿಗಳು ಇವೆ. ಗುಂಡಿಗಳಿಗೆ ಸಿಮೆಂಟ್ ಮಿಶ್ರಿತ ಮಣ್ಣು ಹಾಕಿರುವ ಕಾರಣ ರಸ್ತೆ ದೂಳುಮಯವಾಗಿದೆ. ಇದರಿಂದ ಸಾರ್ವಜನಿಕರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ’ ಎಂದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಶಾಸಕ ಎನ್.ಸಂಪಂಗಿ, ದೂಳಿನ ಸಮಸ್ಯೆ ಪರಿಹರಿಸುವ ಬಗ್ಗೆ ಭರವಸೆ ನೀಡಿದರು. ‘ಮೂರು ವರ್ಷಗಳ ಹಿಂದೆಯೇ 3.40 ಕೋಟಿ ರೂಪಾಯಿ ಅನುದಾನದಲ್ಲಿ ಮುಖ್ಯರಸ್ತೆ ಕಾಮಗಾರಿ ಕೈಗೊಳ್ಳಲಾಗಿತ್ತು. ಆದರೆ ಅಧಿಕಾರಿ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ರಸ್ತೆಗಳು ದೂಳುಮಯವಾಗಿವೆ. ಮುಖ್ಯ ರಸ್ತೆಯ ಶಾಶ್ವತ ಕಾಮಗಾರಿಗೆ ಕೇಂದ್ರ ಸರ್ಕಾರಕ್ಕೆ 9 ಕೋಟಿ ರೂಪಾಯಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದರು.ಜಯಕರ್ನಾಟಕ ಸಂಘಟನೆಯ ಮುಖಂಡ ಗೋವಿಂದರಾಜು, ಕಾರ್ಯದರ್ಶಿ ಮಂಜುನಾಥ, ನಾಗೇಶ, ಚಂದ್ರ, ಕೃಷ್ಣಮೂರ್ತಿ, ಬಾಬಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.