ADVERTISEMENT

ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಿ

ವನಮಹೋತ್ಸವ ಮತ್ತು ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ಸಲಹೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2018, 9:56 IST
Last Updated 9 ಜೂನ್ 2018, 9:56 IST

ಗೌರಿಬಿದನೂರು: ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡಲ್ಲಿ ಆರೋಗ್ಯ ಕಾಪಾಡಿಕೊಳ್ಳಬಹುದು. ಜತೆಗೆ ಸುಸಂಸ್ಕೃತವಾದ ನಾಗರಿಕತೆಯನ್ನು ಕಲಿಯಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್ ಹೇಳಿದರು.

ತಾಲ್ಲೂಕಿನ ಹೊಸೂರಿನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಯ ಸಹಯೋಗದೊಂದಿಗೆ ಆಯೋಜಿಸಿದ್ದ ವನಮಹೋತ್ಸವ, ಸ್ವಚ್ಛತಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಭೂಮಿಯ ಮೇಲಿನ ಪ್ರತಿ ಜೀವರಾಶಿಯು ಪರಿಸರದ ಮೇಲೆ ಅವಂಬಿತವಾಗಿದೆ. ನಿತ್ಯದ ಚಟುವಟಿಕೆಗಳ ಬಗ್ಗೆ ಗಮನಹರಿಸುವ ನಾವೆಲ್ಲರೂ ಪರಿಸರ ರಕ್ಷಣೆ ಮತ್ತು ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಮನೆಯಲ್ಲಿನ ಮಕ್ಕಳ ಆರೋಗ್ಯ ಕಾಪಾಡಬೇಕಾದರೆ ಅವರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವುದು ಅತ್ಯವಶ್ಯಕ ಎಂದು ಹೇಳಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗುರುದತ್ ಹೆಗಡೆ ಮಾತನಾಡಿ, ‘ಗ್ರಾಮೀಣ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಸುತ್ತಲಿನ ಪರಿಸರದ ಸ್ವಚ್ಛತೆ ಪ್ರಮುಖವಾಗುತ್ತದೆ. ಸರ್ಕಾರ ವಿವಿಧ ಯೋಜನೆಗಳ ಮೂಲಕ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡಲು ಜನರಲ್ಲಿ ಅರಿವು ಮೂಡಿಸುತ್ತಿದೆ. ಅದರ ಪ್ರಯೋಜನವನ್ನು ಪಡೆಯಲು ಎಲ್ಲರೂ ಮುಂದಾಗಬೇಕಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ, ಕೇವಲ ಸರ್ಕಾರ ಮತ್ತು ಸಂಘಸಂಸ್ಥೆಗಳ ಶ್ರಮದಿಂದ ಮಾತ್ರ ಗುರಿ ಮುಟ್ಟಲು ಸಾಧ್ಯವಿಲ್ಲ. ಪ್ರತಿ ಯೋಜನೆಯು ಸಾಕಾರಗೊಳ್ಳಬೇಕಾದರೆ ಸಮಾಜದಲ್ಲಿನ ಪ್ರತಿ ನಾಗರಿಕನೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕಾಗಿದೆ. ಆಧುನಿಕ ಜಗತ್ತಿನಲ್ಲಿ ಪರಿಸರದ ಬಗ್ಗೆ ಕಾಳಜಿ ವಹಿಸುವುದು ಅತ್ಯವಶ್ಯಕವಾಗಿದೆ' ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳಾದ ಟಿ.ಎನ್.ಪದ್ಮರಾಜು, ನಾಗೇಶ್, ಬಾಬುರೆಡ್ಡಿ, ಬಿಇಒ ವೈ.ಸಿ.ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ವಿ. ಅಶ್ವತ್ಥನಾರಾಯಣರಾವ್, ತಾಲ್ಲೂಕು ಪಂಚಾಯಿತಿ ಸದಸ್ಯ ಲೋಕೇಶ್, ಮುಖ್ಯ ಶಿಕ್ಷಕ ಐ‌.ಎಸ್.ಸಿದ್ದರಾಮಯ್ಯ, ಪ್ರಾಂಶುಪಾಲರು ಎಂ.ಸಿ.ವೀಣಾಕ್ಷಮ್ಮ, ತಾಲ್ಲೂಕು ಆರೋಗ್ಯಾಧಿಕಾರಿ ಒ.ರತ್ನಮ್ಮ, ಶಿಕ್ಷಕರಾದ ಕೆ.ನಾಗರಾಜು, ನೋಡಲ್ ಅಧಿಕಾರಿ ಮುನಿರಾಜು, ನರಸಿಂಹಮೂರ್ತಿ, ವೆಂಕಟೇಶ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.