ಚಿಕ್ಕಬಳ್ಳಾಪುರ: ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಜಿಲ್ಲೆಯಲ್ಲಿ ಕಡಿಮೆ ಮಳೆಯಾಗಿದ್ದು, ಇದರ ಸಂಬಂಧ ಕೃಷಿ ಇಲಾಖೆಯವರು ಕೈಗೊಂಡಿರುವ ಕ್ರಮಗಳ ಕೃಷಿ ಇಲಾಖೆ ಸಮಗ್ರ ವಿವರಣೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಬಿ. ಸಾವಿತ್ರಮ್ಮ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಯಾಗದ ಕಾರಣ ರೈತರು ಕಂಗಾಲಾಗಿದ್ದಾರೆ. ದಿಕ್ಕು ತೋಚದ ಸ್ಥಿತಿಗೆ ತಲುಪಿದ್ದಾರೆ. ಅವರ ನೆರವಿಗಾಗಿ ಏನೇನೂ ಮಾಡಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಬೇಕು ಎಂದರು.
ರೈತರು ಕೃಷಿ ವಿಮೆ ಮಾಡಿಸಿರುವ ಮತ್ತು ಈಗಾಗಲೇ ಕೃಷಿ ವಿಮೆಯನ್ನು ಪಡೆದ ರೈತರು ಸಾಲ ತೀರಿಸಿರುವ ಬಗ್ಗೆಯೂ ಮಾಹಿತಿ ನೀಡಬೇಕು. ಕೃಷಿ ವಿಮೆ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಇರದ ಕಾರಣ ಬಹುತೇಕ ರೈತರಿಗೆ ಕೃಷಿ ವಿಮೆ ಸೌಲಭ್ಯಗಳು ಗೊತ್ತಿಲ್ಲ. ಕೃಷಿ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು ಎಂದು ಅವರು ತಿಳಿಸಿದರು.
ಸುವರ್ಣ ಭೂಮಿ ಯೋಜನೆಯು ಎಷ್ಟು ರೈತರಿಗೆ ಉಪಯುಕ್ತವಾಗಿದೆ. ಎಷ್ಟು ಮಂದಿ ಫಲಾನುಭವಿಗಳಿಗೆ ಹಣ ತಲುಪಿದೆ ಎಂಬುದರ ಬಗ್ಗೆ ಮಾಹಿತಿ ನೀಡಬೇಕು. ಯೋಜನೆಗೆ ಸಂಬಂಧಿಸಿ ದಂತೆ ಪೂರ್ಣಪ್ರಮಾಣದ ಸಮೀಕ್ಷೆ ನಡೆಸಿ, ವರದಿ ನೀಡಬೇಕು ಎಂದು ಅವರು ತಿಳಿಸಿದರು.
ಕೃಷಿ ಚಟುವಟಿಕೆಗೆ ಸರ್ಕಾರ ಹಲವು ಯೋಜನೆಜಾರಿಗೆ ತಂದಿದ್ದು, ರೈತರಿಗೆ ಸಂಪೂರ್ಣ ಮಾಹಿತಿ ನೀಡ ಬೇಕು. ಸರ್ಕಾರದ ವತಿಯಿಂದ ನೀಡ ಲಾಗುವ ರಸಗೊಬ್ಬರ, ಕೀಟನಾಶಕ ಮತ್ತು ಸಲಕರಣೆಗಳ ಬಗ್ಗೆ ಪೂರ್ಣ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.
ಕೃಷಿ ಇಲಾಖೆಯ ಅಧಿಕಾರಿಗಳು ಮಾತನಾಡಿ, ಕೃಷಿ ವಿಮೆ ಬಗ್ಗೆ ಈಗಾಗಲೇ ಸಾಕಷ್ಟು ಪ್ರಚಾರವನ್ನು ಮಾಡಲಾಗಿದೆ. ಹಳ್ಳಿಗಳಿಗೆ ಭೇಟಿ ನೀಡಿ ಬೆಳೆ ಹಾನಿಯಾಗಿರುವ ಬಗ್ಗೆ ರೈತರಿಂದ ಸಂಪೂರ್ಣ ಮಾಹಿತಿ ಪಡೆದಿದ್ದು, ಕ್ರಮ ಕೈಕೊಳ್ಳುತ್ತಿದ್ದೇವೆ ಎಂದರು.
ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ಮಾತನಾಡಿ, ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೆ 62 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಯಾಗಿದ್ದು, 60 ಲಕ್ಷ ರೂಪಾಯಿ ಖರ್ಚಾಗಿದೆ. ವಸತಿ ನಿಲಯಗಳ ಕಟ್ಟಡಗಳ ನಿರ್ವಹಣೆಗೆ ರೂ.1.25 ಲಕ್ಷ ರೂಪಾಯಿ ಬಿಡುಗಡೆಯಾಗಿದೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಹಾಯಧನಕ್ಕೆ ರೂ.2.50 ಲಕ್ಷ ಬಿಡುಗಡೆಯಾಗಿದ್ದು, ಶೇ 100ರಷ್ಟು ಪ್ರಗತಿ ಸಾದಿಸಲಾಗಿದೆ ಎಂದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪಯ್ಯ, ಸಿಇಒ ಬಿ.ಎಸ್.ಶೇಖರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷರು ಮುತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.