ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ನಿರಾಸಕ್ತಿ ತೋರಿದ್ದಲ್ಲಿ, ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡ ಆರ್.ಆಂಜನೇಯ ರೆಡ್ಡಿ ತಿಳಿಸಿದರು.
ಶಾಶ್ವತ ನೀರಾವರಿ ಯೋಜನೆಗಾಗಿ ಹಲವಾರು ವರ್ಷಗಳಿಂದ ವಿವಿಧ ಸ್ವರೂಪಗಳಲ್ಲಿ ಮತ್ತು ಹಂತಗಳಲ್ಲಿ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸಿಲ್ಲ. ನೀರಾವರಿ ಸಮಸ್ಯೆ ಪರಿಹರಿಸುವತ್ತ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ. ನೀರಾವರಿ ತಜ್ಞ ಡಾ. ಜಿ.ಎಸ್.ಪರಮಶಿವಯ್ಯ ವರದಿ ಜಾರಿ ಮಾಡುವುದಾಗಿ ಹೇಳಿದ ಸರ್ಕಾರ ಸಮಗ್ರ ಯೋಜನೆ ವರದಿ ತಯಾರಿಕೆಗೆ 23.50 ಕೋಟಿ
ರೂಪಾಯಿ ಮಾತ್ರವೇ ಮೀಸಲಿಟ್ಟಿದೆ. ಆದರೆ ಯೋಜನೆ ವರದಿ ತಯಾರಿಕೆಗೆ ಟೆಂಡರ್ ಪ್ರಕ್ರಿಯೆ ಕೈಗೊಂಡಿಲ್ಲ.
ಸರ್ಕಾರ ತಾಂತ್ರಿಕ ಕಾರಣಗಳ ನೆಪವನ್ನು ಒಡ್ಡುತ್ತದೆ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರ ನಿರ್ಲಕ್ಷ್ಯ ತೋರುವುದನ್ನು ಮುಂದುವರೆಸಿದ್ದಲ್ಲಿ, ಮುಂದಿನ ದಿನಗಳಲ್ಲಿ ಅಣ್ಣಾ ಹಜಾರೆ ಮಾದರಿಯ ಹೋರಾಟ ಕೈಗೊಳ್ಳಲಾಗುವುದು. ಜನಾಂದೋಲನ ರೂಪಿಸಿ, ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.