ADVERTISEMENT

ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2013, 10:19 IST
Last Updated 20 ಜುಲೈ 2013, 10:19 IST

ಚಿಕ್ಕಬಳ್ಳಾಪುರ: ಶಾಲಾ ವಾಹನಗಳ ಚಾಲಕರು ಹೆಚ್ಚು ಜಾಗರೂಕತೆ ವಹಿಸಬೇಕು. ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕರೆತರುವ ಮತ್ತು ಮನೆಗೆ ಬಿಟ್ಟು ಬರುವ ಜವಾಬ್ದಾರಿ ಇರುತ್ತದೆ. ಅವರು ಅದನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಎಸ್.ಮಹೇಶ್‌ಕುಮಾರ್ ಸಲಹೆ ಮಾಡಿದರು.

ಸಂಚಾರ ನಿಯಮಗಳ ಕುರಿತು ಶಾಲಾ ವಾಹನ ಚಾಲಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ನಂದಿ ರಂಗಮಂದಿರದ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಾಲಕರ ಮೇಲೆ ನಂಬಿಕೆಯಿಟ್ಟು ಪೋಷಕರು ಮಕ್ಕಳನ್ನು ಕಳುಹಿಸುತ್ತಾರೆ. ಚಾಲಕರು ಜಾಗರೂಕತೆಯಿಂದ ವಾಹನ ಚಾಲನೆ ಮಾಡಬೇಕು ಎಂದರು.

ವಾಹನ ಚಾಲಕರನ್ನು ಆಯ್ಕೆ ಮಾಡಿಕೊಳ್ಳುವಾಗ ಶಾಲಾ ಆಡಳಿತ ಮಂಡಳಿ ಪ್ರತಿಯೊಂದು ವಿಷಯದ ಬಗ್ಗೆ ನಿಗಾ ವಹಿಸಬೇಕು. ಚಾಲನಾ ಪರವಾನಗಿ ಹೊಂದಿದ್ದಾರೆಯೇ? ಅವರ ವ್ಯಕ್ತಿತ್ವ ಎಂಥದ್ದು  ಎಂಬ ಬಗ್ಗೆ ಗಮನಹರಿಸಬೇಕು ಎಂದು ಅವರು ತಿಳಿಸಿದರು.

ಶಾಲಾ ವಾಹನ ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸಬಾರದು. ನಿಗದಿತ ಸೀಟುಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಕೂರಿಸಿಕೊಳ್ಳಬಾರದು. ವೇಗವಾಗಿ ಚಾಲನೆ ಮಾಡಬಾರದು ಎಂದು ಅವರು ತಿಳಿಸಿದರು.

ಪೋಷಕರು ಮತ್ತು ಮಕ್ಕಳೊಂದಿಗೆ ಸರಿಯಾಗಿ ವರ್ತಿಸಬೇಕು. ಮಕ್ಕಳನ್ನು ಮನೆಗೆ ತಲುಪಿಸಲು ವಿಳಂಬವಾದಲ್ಲಿ ಅಥವಾ ಬೇರೆ ಏನಾದರೂ ಸಮಸ್ಯೆಯಾದಲ್ಲಿ ಪೋಷಕರಿಗೆ ತಕ್ಷಣವೇ ವಿಷಯ ಮುಟ್ಟಿಸಬೇಕು ಎಂದು ಅವರು ಹೇಳಿದರು. ಪ್ರೊಬೇಷನರಿ ಡಿವೈಎಸ್ಪಿ ಲಾವಣ್ಯಾ, ನಗರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ವಸಂತ್, ಸಂಚಾರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್, ಸರ್ಕಲ್ ಇನ್ಸ್‌ಪೆಕ್ಟರ್ ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.