ADVERTISEMENT

ಸಭೆಗೆ ನಾಲ್ವರು ಶಾಸಕರು ಹಾಜರ್ !

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2012, 5:30 IST
Last Updated 14 ಫೆಬ್ರುವರಿ 2012, 5:30 IST

ಚಿಕ್ಕಬಳ್ಳಾಪುರ:  ಸಾಮಾನ್ಯವಾಗಿ ಒಬ್ಬರು ಅಥವಾ ಇಬ್ಬರು ಶಾಸಕರ ಉಪಸ್ಥಿತಿಯಲ್ಲಿ ನಡೆಯುತ್ತಿದ್ದ ಪ್ರಗತಿ ಪರಿಶೀಲನಾ ಸಭೆಯು ಸೋಮವಾರ ಕೊಂಚ ಭಿನ್ನವಾಗಿತ್ತು. ಹಲವು ತಿಂಗಳುಗಳ ನಂತರ 4  ತಾಲ್ಲೂಕುಗಳ ಶಾಸಕರು ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಹೇಳಿಕೊಂಡಿದ್ದು ವಿಶೇಷವಾಗಿತ್ತು.

ಗೌರಿಬಿದನೂರು ಶಾಸಕ ಎನ್.ಎಚ್.ಶಿವಶಂಕರ ರೆಡ್ಡಿ ಹೊರತುಪಡಿಸಿ ಚಿಕ್ಕಬಳ್ಳಾಪುರ ಶಾಸಕ ಕೆ.ಪಿ.ಬಚ್ಚೇಗೌಡ, ಚಿಂತಾಮಣಿ ಶಾಸಕ ಡಾ. ಎಂ.ಸಿ.ಸುಧಾಕರ್, ಬಾಗೇಪಲ್ಲಿ ಶಾಸಕ ಎನ್.ಸಂಪಂಗಿ ಮತ್ತು ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಅವರು ಸಭೆಯಲ್ಲಿ ಭಾಗವಹಿಸಿದ್ದರು.

ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಹೇಳಿಕೊಂಡ ನಾಲ್ವರು ಶಾಸಕರು ಸಂಕಷ್ಟಗಳ ಪರಿಹಾರಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ನಾರಾಯಣಸ್ವಾಮಿಯವರಿಗೆ ಮನವಿ ಮಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಕಾಡುತ್ತಿರುವ ವಿದ್ಯುತ್ ಮತ್ತು ನೀರು ಪೂರೈಕೆ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿದ ಶಾಸಕರು, `ಸಮಸ್ಯೆ ಬಗೆಹರಿಸುವಿಕೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.
 
ಆದರೆ ಸಮಸ್ಯೆ ಮಾತ್ರ ತೀವ್ರಗತಿಯಲ್ಲಿ ಪರಿಹಾರವಾಗುವುದೇ ಇಲ್ಲ. ಅಧಿಕಾರಿಗಳು ಒಂದಿಲ್ಲೊಂದು ನೆಪಗಳನ್ನು ಹೇಳಿ ಕರ್ತವ್ಯದಿಂದ ನುಣುಚಿಕೊಳ್ಳುತ್ತಾರೆ. ಹೀಗಾದರೆ ನಮ್ಮ ಕ್ಷೇತ್ರದಲ್ಲಿನ ಸಮಸ್ಯೆಗಳು ಪರಿಹಾರವಾಗುವುದು ಯಾವಾಗ~ ಎಂದು ಪ್ರಶ್ನಿಸಿದರು. `ಬರಗಾಲದಿಂದ ಭಾರಿ ಸಮಸ್ಯೆಗಳು ಉಂಟಾಗಿದ್ದು, ಅವುಗಳ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು. ಇದರ ಬಗ್ಗೆ ಸರ್ಕಾರ ಗಮನಹರಿಸಬೇಕು~ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.