ADVERTISEMENT

ಸಮರ್ಥ ಕಾರ್ಯನಿರ್ವಹಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2011, 6:55 IST
Last Updated 9 ಜೂನ್ 2011, 6:55 IST

ಶಿಡ್ಲಘಟ್ಟ: `ಯಾವುದೇ ರೀತಿಯಾಗಿ ಫಲಾನು ಭವಿಗಳ ಹಣ ಪೋಲಾಗಬಾರದು. ಅಧಿಕಾರಿ ಗಳು ಜನಪ್ರತಿನಿಧಿಗಳಿಗೆ ಸಮರ್ಪಕ ಮಾಹಿತಿ ನೀಡುವುದರ ಜೊತೆಗೆ ಜನಸಾಮಾನ್ಯರಿಗೆ ಮತ್ತು ಬಡವರಿಗೆ ಸಕಲ ನೆರವು ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಬಿ.ಸಾವಿತ್ರಮ್ಮ ಸೂಚಿಸಿದರು.

ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಬುಧ ವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, `ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡುವುದರ ಜೊತೆಗೆ ಸಮರ್ಥ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು~ ಎಂದರು.

 ಜಿಲ್ಲಾ ಪಂಚಾಯಿತಿ ಸದಸ್ಯ ಸೊಣ್ಣೇನಹಳ್ಳಿ ನಾರಾಯಣಸ್ವಾಮಿ ಮಾತನಾಡಿ, `ಗಿಡ ನೆಡಲೆಂದೇ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶೇ.20ರಷ್ಟು ಹಣ ಮೀಸಲಿಡಲಾಗಿದೆ. ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಿ ಯೋಜನೆಗಳನ್ನು ಸಿದ್ಧಪಡಿಸಿ ನರ್ಸರಿಗಳನ್ನು ಮಾಡಬೇಕು~ ಎಂದರು.

`ಮುಂಗಾರಿನ ವೇಳೆ ನಾಟಿ ಮಾಡಲು ಮೊದಲಿಂದಲೇ ಸಿದ್ಧತೆ ಮಾಡಿಕೊಂಡಿರಬೇಕು. ಎಲ್ಲೆಲ್ಲಿ ಎಂಥ ಮರಗಳನ್ನು ಬೆಳೆಸಿದರೆ ಅನುಕೂಲ ಎಂಬ ಮಾಹಿತಿಯನ್ನು ಜನರಿಗೆ ನೀಡಿ ಅವರಿಗೆ ಮರ ಗಿಡಗಳನ್ನು ನೆಡಲು ಪ್ರೋತ್ಸಾಹಿಸಬೇಕು. ರೈತರ ಅಗತ್ಯತೆಯ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು~ ಎಂದು ಅವರು ತಿಳಿಸಿದರು.

 ಜಿಲ್ಲಾ ಪಂಚಾಯಿತಿ ಸದಸ್ಯ ಕಂಬದಹಳ್ಳಿ ಸತೀಶ್ ಮಾತನಾಡಿ, `ಅಂಗನವಾಡಿ ಕೇಂದ್ರಗಳಲ್ಲಿ ಆಹಾರ, ಕಟ್ಟಡ, ಶುಚಿತ್ವ ಹಾಗೂ ಗ್ಯಾಸ್ ಮೊದಲಾದ ಸೌಲಭ್ಯಗಳ ಬಗ್ಗೆ ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ಹೊಂದಿರಬೇಕು. ಆಗಾಗ್ಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿನ ಕುಂದುಕೊರತೆಗಳ ಬಗ್ಗೆ ಕ್ರಮ ಕೈಗೊಳ್ಳಬೇಕು. ಸೋರುವ ಶಾಲೆಗಳ ಕಟ್ಟಡಗಳ ದುರಸ್ತಿ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಳೆಗಾಲದ ಮುನ್ನವೇ ಗಮನಹರಿಸಬೇಕು~ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಲೀಲಾ ರಾಜಣ್ಣ, ಶೋಭಾ ಪ್ರಕಾಶ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮತ್ತು ನೋಡಲ್ ಅಧಿಕಾರಿ ಬಾಲಕೃಷ್ಣ, ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಅಮರನಾಥ್, ತಾ.ಪಂ.ಅಧ್ಯಕ್ಷ ವೇಣುಗೋಪಾಲ್, ಉಪಾಧ್ಯಕ್ಷೆ ದ್ಯಾವಮ್ಮ, ತಾಲ್ಲೂಕು ಮಟ್ಟದ ಇಲಾಖೆ ಅಧಿಕಾರಿಗಳು ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.