ಚಿಕ್ಕಬಳ್ಳಾಪುರ: ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಹೊಸಹುಡ್ಯಕ್ಕೆ ಬಂದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಗ್ರಾಮದಲ್ಲಿಯೇ ರಾತ್ರಿ ವಾಸ್ತವ್ಯ ಹೂಡಿದರು.
ತಮ್ಮನಾಯಕನಹಳ್ಳಿಯಲ್ಲಿ ಬಿ.ಆರ್. ಅಂಬೇಡ್ಕರ್ ಭವನ, ಜಾತವಾರ ಗ್ರಾಮದಲ್ಲಿ ಗ್ರಾಮ ವಿಕಾಸ್ ಯೋಜನೆಯಡಿ ನಿರ್ಮಾಣವಾಗಿರುವ ಗರಡಿ ಮನೆ ಹಾಗೂ ಸಮುದಾಯ ಭವನ ಉದ್ಘಾಟಿಸಿದರು.
ಗಿಡ್ನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ರನ್ನಿಂಗ್ ಟ್ರ್ಯಾಕ್, ಬಾಸ್ಕೆಟ್ ಬಾಲ್, ವಾಲಿಬಾಲ್, ಕೊಕ್ಕೊ ಹಾಗೂ ಕಬಡ್ಡಿ ಆಟಗಳ ಮೈದಾನ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಹಾಗೂ ಗಿಡ್ನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 234ರಿಂದ ದೊಡ್ಡಯಲ್ಲಮ್ಮ ದೇವಸ್ಥಾನದವರೆಗಿನ ಸಿ.ಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಹೊಸಹುಡ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ 4,266 ಫಲಾನುಭವಿಗಳಿಗೆ ಮಂಜೂರಾತಿ ಪತ್ರ ಹಾಗೂ ಕಾರ್ಯಾದೇಶ ಪತ್ರಗಳನ್ನು ವಿತರಿಸಿದರು.
‘ಸರ್ಕಾರದ ಸೌಲಭ್ಯಗಳನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡುತ್ತೇವೆ’ ಎಂದು ಈ ವೇಳೆ ಸಚಿವರು ಹೇಳಿದರು.
‘ಜಿಲ್ಲೆಯಲ್ಲಿ ವಿಶೇಷ ಕೈಗಾರಿಕಾ ವಲಯ ತಲೆ ಎತ್ತಲಿದೆ.ಮುಂದಿನ ಐದು ವರ್ಷಗಳಲ್ಲಿ ಕನಿಷ್ಠ ₹ 1 ಲಕ್ಷ ಕೋಟಿ ಹೂಡಿಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗುತ್ತದೆ ಎಂದು ವಿಶ್ವಾಸದಿಂದ ಹೇಳುತ್ತೇವೆ. ಕನಿಷ್ಠ 50 ಸಾವಿರ ಯುವಕರಿಗೆ ಉದ್ಯೋಗ ಸಿಗುತ್ತದೆ. ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ’ ಎಂದರು.
‘ಯಾವ ಕೆರೆಗೆ ಹೋದರೂ ನಾವು ನೀರನ್ನು ಕಾಣುತ್ತೇವೆ.ಈ ಹಿಂದಿನ ಯಾವ ಸರ್ಕಾರಗಳೂ ಕುಡಿಯುವ ನೀರನ್ನು ನಲ್ಲಿ ಮೂಲಕ ಎಲ್ಲ ಮನೆಗಳ ಬಾಗಿಲಿಗೆ ತರುವ ಕೆಲಸವನ್ನು ಮಾಡಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಜಲಜೀವನ ಯೋಜನೆಯನ್ನು ಜಾರಿಗೊಳಿಸಿದರು’ ಎಂದು ಹೇಳಿದರು.
ಜಿ.ಪಂ. ಮುಖ್ಯ ಕಾರ್ಯ ನಿರ್ವಣಾ ಧಿಕಾರಿ ಪಿ. ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಆನಂದ ರೆಡ್ಡಿ ಬಾಬು,ಮುಖಂಡರಾದಮರಳು ಕುಂಟೆ ಕೃಷ್ಣಮೂರ್ತಿ, ನವೀನ್ ಕಿರಣ್, ಹೊಸಹುಡ್ಯ ನಾರಾಯಣಸ್ವಾಮಿ, ಗಿಡ್ನ ಹಳ್ಳಿ ನಾರಾಯಣಸ್ವಾಮಿ, ಕೇಶವಾರ ರಾಮಣ್ಣ, ಕೃಷ್ಣಾರೆಡ್ಡಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.