ಚಿಂತಾಮಣಿ: ರಾಜ್ಯದಲ್ಲಿ ದಲಿತ, ಮುಸ್ಲಿಮ್ ಹಾಗೂ ಹಿಂದುಳಿದ ಜಾತಿಗಳ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಬುಧವಾರ ವಿವಿಧ ಸಂಘಟನೆಗಳ ನಾಯಕರು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು.
ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ಪ್ರವಾಸಿ ಮಂದಿರದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಅತ್ಯಾಚಾರಿಗಳ ಹಾಗೂ ಕೊಲೆಗಡುಕರ ವಿರುದ್ಧ ಘೋಷಣೆಗಳು ಹಾಗೂ ಧಿಕ್ಕಾರ ಕೂಗುತ್ತಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು.
ನಂತರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ದಲಿತ ಸಂಘರ್ಷ ಸಮಿತಿಯ ಮುಖಂಡ ಕವಾಲಿ ವೆಂಕಟರವಣಪ್ಪ ಮಾತನಾಡಿ, ಬೀದರ್ ಜೈಬುನ್ನೀಸಾ ಸಾವಿನ ಕುರಿತು ಪ್ರಾಮಾಣಿಕ ತನಿಖೆ ನಡೆಸಿ, ಹಂತಕರಿಗೆ ಜೈಲು ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ನಾನಾ ಭಾಗಗಳಲ್ಲಿ ಹೆಣ್ಣುಮಕ್ಕಳ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳನ್ನು ನ್ಯಾಯವಾದ ತನಿಖೆಗೆ ಒಳಪಡಿಸಬೇಕು. ಅತ್ಯಾಚಾರಿಗಳು ತಪ್ಪಿಸಿಕೊಳ್ಳದಂತೆ ಉತ್ತಮ ಅಧಿಕಾರಿಗಳಿಗೆ ತನಿಖೆಯ ಹೊಣೆ ವಹಿಸಬೇಕು. ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.