ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರುಗಳೇ ಇಲ್ಲ. ಹೀಗಿದ್ದರೂ ಸಚಿವ ಡಾ.ಕೆ. ಸುಧಾಕರ್ ಅವರ ವಿರುದ್ಧ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡಎಸ್.ಪಿ. ಶ್ರೀನಿವಾಸ್ ತಿಳಿಸಿದ್ದಾರೆ.
ಸಚಿವರ ಬಗ್ಗೆ ಹುರುಳಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇವುಗಳನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಶಾಸ್ತಿ ಕಾದಿದೆ. ಚಿಕ್ಕಬಳ್ಳಾಪುರ ಕ್ಷೇತ್ರ ಹಾಗೂ ಜಿಲ್ಲೆ ಹಿಂದೆಂದೂ ಕಾಣದ ಅಭಿವೃದ್ಧಿಯನ್ನು ಕಾಣುತ್ತಿದೆ. ಅಭಿವೃದ್ಧಿ ಬಗ್ಗೆ ಮಾತನಾಡದೆ ಸಚಿವರನ್ನು ವೈಯಕ್ತಿಕವಾಗಿ ದೂಷಿಸಲು ಹೊರಟಿರುವುದು ಕಾಂಗ್ರೆಸ್ ಮುಖಂಡರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.
ಬೇರೆ ಕ್ಷೇತ್ರಗಳಿಂದ ನಾಯಕರನ್ನು ಕರೆ ತಂದು ಚಿಕ್ಕಬಳ್ಳಾಪುರದಲ್ಲಿ ಮೆರವಣಿಗೆ ಮಾಡಿಸಿದರೆ ಅದನ್ನು ನೋಡಿ ಬಗ್ಗುವ ಜಾಯಮಾನ ಸುಧಾಕರ್ ಅವರದ್ದಲ್ಲ. ಕೋಚಿಮುಲ್ ಮತ್ತು ಡಿಸಿಸಿ ಬ್ಯಾಂಕ್ನಿಂದ ದೊರೆಬೇಕಾದ ಸೌಲಭ್ಯಗಳು ಜಿಲ್ಲೆಯ ರೈತರಿಗೆ ದೊರೆಯುತ್ತಿಲ್ಲ. ಇದರಿಂದ ಸಚಿವರು ಇವುಗಳ ವಿಭಜನೆಗೆ ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.
ರೈತರ ಹಿತದ ಕಾರಣದಿಂದ ಕೋಚಿಮುಲ್, ಡಿಸಿಸಿ ಬ್ಯಾಂಕ್ ಪ್ರತ್ಯೇಕ ಮಾಡಲು ಸಚಿವರು ಅಡಿ ಇಟ್ಟಿದ್ದಾರೆ. ಕಾಂಗ್ರೆಸ್ ಮುಖಂಡರು ಇದನ್ನು ಅರಿತುಕೊಳ್ಳಬೇಕು. ಸಚಿವರ ಜೊತೆ ಕೈಜೋಡಿಸಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಿಕೊಡಬೇಕು. ಆದರೆ ಆ ಕೆಲಸವನ್ನು ಮಾಡುತ್ತಿಲ್ಲ ಎಂದು ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.