ಶಿಡ್ಲಘಟ್ಟ: ‘ಸಮಾಜದಲ್ಲಿ ಅತಿಹೆಚ್ಚು ಗೌರವ ಹಾಗೂ ಘನತೆಗೆ ಪಾತ್ರವಾಗಿರುವ ಶಿಕ್ಷಣ ವ್ಯವಸ್ಥೆ ಹಾಗೂ ಶಿಕ್ಷಕರನ್ನು ಪ್ರತಿಯೊಬ್ಬರು ಗೌರವಿಸಬೇಕು’ ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಗರ ಹೊರವಲಯದ ಹನುಮಂತಪುರ ಗೇಟ್ ಬಳಿಯಿರುವ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಆರೋಜಿಸಲಾಗಿದ್ದ ಭಾರತ ರತ್ನ ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರ ಹೊರತುಪಡಿಸಿ ಬೇರಾವುದೇ ಕ್ಷೇತ್ರದಿಂದ ಸಮಾಜದಲ್ಲಿ ಪರಿವರ್ತನೆ ಹಾಗೂ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಶಿಕ್ಷಕರು ಕೇವಲ ಪಾಠ ಕಲಿಸುವುದಷ್ಟೇ ಅಲ್ಲದೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಡೆಗೆ ಹೆಚ್ಚಿನ ಚಿಂತನೆ ನಡೆಸಬೇಕು ಎಂದರು.
ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದ್ದ ಗುರುಭವನ ನಿರ್ಮಾಣ ಮಾಡಲು ಶಾಸಕರ ನಿಧಿಯಿಂದ ₹ 25 ಲಕ್ಷ ನೀಡುವ ಭರವಸೆ ನೀಡಿದ ಅವರು, ಮೊದಲನೇ ಕಂತಿನ ₹ 15 ಲಕ್ಷವನ್ನು ಮುಂದಿನ ತಿಂಗಳು ನೀಡಲಿದ್ದು, ಉಳಿದ ಹಣವನ್ನು ಮುಂದಿನ ಮಾರ್ಚ್ ತಿಂಗಳ ನಂತರ ನೀಡಲಾಗುವುದು. ಗುರುಭವನ ನಿರ್ಮಾಣಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.
ತಹಶೀಲ್ದಾರ್ ಬಿ.ಎಸ್. ರಾಜೀವ್ ಮಾತನಾಡಿ, ರಾಧಾಕೃಷ್ಣನ್ ಅವರು ಪ್ರತಿಯೊಬ್ಬ ಶಿಕ್ಷಕರಿಗೆ ಆದರ್ಶ ವ್ಯಕ್ತಿಯಾಗಿರಬೇಕು. ಬಡತನದ ನಡುವೆಯೂ ಅವರು ಮಾಡಿದ ಅಪಾರವಾದ ಸಾಧನೆಗಳೇ ಪ್ರೇರಣೆಯಾಗಬೇಕು. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 8 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿರುವುದು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ನಿವೃತ್ತರಾದ 16 ಪ್ರಾಥಮಿಕ ಶಾಲೆ ಶಿಕ್ಷಕರು ಹಾಗೂ 7 ಪ್ರೌಢಶಾಲಾ ಶಿಕ್ಷಕರನ್ನು ಗೌರವಿಸಲಾಯಿತು. ನಗರಸಭೆ ಪೌರಾಯುಕ್ತ ಆರ್. ಶ್ರೀಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು, ಸರ್ಕಲ್ ಇನ್ಸ್ಪೆಕ್ಟರ್ ಧರ್ಮೇಗೌಡಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.