ADVERTISEMENT

ಕೊರೊನಾ: ತಪ್ಪು ಸಂದೇಶಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 14:35 IST
Last Updated 16 ಮಾರ್ಚ್ 2020, 14:35 IST
ಕೊರೊನಾವೈರಸ್ ಸೋಂಕು
ಕೊರೊನಾವೈರಸ್ ಸೋಂಕು   

ಚಿಕ್ಕಬಳ್ಳಾಪುರ: ‘ಕೊರೊನಾ ವೈರಸ್‌ ಸೋಂಕು ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊರಾನಾ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ದೃಷ್ಟಿಯಿಂದ ಜಿಲ್ಲಾಡಳಿತವು ವಿಶೇಷವಾಗಿ ನಿಗಾ ವಹಿಸಿದೆ’ ಎಂದು ಹೇಳಿದರು.

‘ವಿದೇಶ ಪ್ರವಾಸ ಮಾಡಿ ಬಂದಿರುವ ಜಿಲ್ಲೆಯ 66 ಜನರ ಪೈಕಿ 45 ಮಂದಿಯ ಮೇಲೆ ತೀವ್ರ ನಿಗಾವಹಿಸಿ ತಪಾಸಣೆಗೆ ಒಳಪಡಿಸಲಾಗಿದೆ. ಯಾರಲ್ಲಿಯೂ ಕೊರಾನಾ ವೈರಸ್ ಲಕ್ಷಣಗಳು ಕಂಡುಬಂದಿಲ್ಲ. ಜಿಲ್ಲೆಯಲ್ಲಿ ಈವರೆಗೆ ಒಂದೇ ಒಂದು ಪ್ರಕರಣ ಪತ್ತೆಯಾಗಿಲ್ಲ. ಆದ್ದರಿಂದ ಜನರು ಗೊಂದಲಕ್ಕೆ ಒಳಗಾಗಬಾರದು’ ಎಂದು ಮನವಿ ಮಾಡಿದರು.

ADVERTISEMENT

‘ಕೊರೊನಾ ವೈರಸ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮಕೈಗೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಬಸ್ ನಿಲ್ದಾಣಗಳಲ್ಲಿ ಜಾಗೃತಿ ಪತ್ರಗಳನ್ನು ಅಂಟಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯ ಜನರು ಸೇರುವ ಜಾತ್ರೆ, ಸಂತೆಗಳನ್ನು ನಡೆಸದಂತೆ ನಿರ್ಬಂಧಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸದಾ ನಿಗಾ ವಹಿಸಿ, ಸಂಭವಿಸುವ ವಿದ್ಯಮಾನಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ. ಯೋಗೇಶ್ ಗೌಡ, ತಾಲ್ಲೂಕು ಮಟ್ಟದ ಆರೋಗ್ಯಾಧಿಕಾರಿಗಳು, ಎಲ್ಲ ತಾಲ್ಲೂಕುಗಳ ತಹಶೀಲ್ದಾರ್‌ರು ಹಾಜರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.