ಚಿಂತಾಮಣಿ: ನಗರ ಹಾಗೂ ತಾಲ್ಲೂಕಿನ ಹಲವು ಮತಗಟ್ಟೆಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ ಅವರು ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳ ಜತೆ ವಿಚಾರ, ವಿನಿಮಯ ಮಾಡಿಕೊಂಡರು.
ಮತಗಟ್ಟೆಗಳ ಭೌತಿಕ ಪರಿಶೀಲನೆ, ಮತಗಟ್ಟೆ ವ್ಯಾಪ್ತಿಯ ಮತದಾರರ ಪಟ್ಟಿ, ಸುತ್ತಮುತ್ತಲ ಪ್ರದೇಶ ಪರಿಶೀಲಿಸಿ ಮೂಲ ಸೌಕರ್ಯಗಳ ಕುರಿತು ಮಾಹಿತಿ ಪಡೆದರು. ಬಳಿಕ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.
ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಗೌರವದಿಂದ ಕಾಣಬೇಕು. ಅವರ ಮನವಿ ಸ್ವೀಕರಿಸಿ, ಸಮಸ್ಯೆಗಳ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಬೇಕು. ಕಾನೂನು ಬದ್ಧವಾಗಿಲ್ಲದಿದ್ದರೆ, ಹೆಚ್ಚಿನ ದಾಖಲೆ ಅಗತ್ಯವಿದ್ದರೆ ಸೂಕ್ತ ತಿಳಿವಳಿಕೆ ನೀಡಬೇಕು. ಅನಗತ್ಯವಾಗಿ ಪದೇ ಪದೇ ಕಚೇರಿಗಳಿಗೆ ಅಲೆದಾಡುವಂತೆ ಮಾಡಬಾರದು ಎಂದು ಸೂಚಿಸಿದರು.
ತಾಲ್ಲೂಕು ಆಡಳಿತ ಭವನದಲ್ಲಿನ ಸಿಬ್ಬಂದಿ ಕೊರತೆ, ಆಡಳಿತ ಕಾರ್ಯ ವೈಖರಿ, ಸಾರ್ವಜನಿಕರಿಗೆ ದೊರೆಯುತ್ತಿರುವ ಸೇವೆಗಳು, ಕುಂದು ಕೊರತೆಗಳ ಪರಿಶೀಲನೆ ನಡೆಸಿದರು. ಮತದಾರರ ನೋಂದಣಿ, ಮತದಾರರ ಕಾರ್ಡ್ಗೆ ಆಧಾರ್ ಕಾರ್ಡ್ ಜೋಡಣೆ ಪ್ರಗತಿಯ ಬಗ್ಗೆ ವಿವರ ಪಡೆದರು.
ತಹಶೀಲ್ದಾರ್ ಮುನಿಶಾಮಿರೆಡ್ಡಿ, ಪೌರಾಯುಕ್ತ ರಾಘವೇಂದ್ರಗುರು, ಚುನಾವಣಾ ಶಾಖೆಯ ಸೆಕ್ಟರ್ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.