ADVERTISEMENT

‘ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ’

ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದ ಶಾಸಕ ಎಂ. ಕೃಷ್ಣಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 4:03 IST
Last Updated 25 ಜೂನ್ 2021, 4:03 IST
ಚಿಂತಾಮಣಿಯ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಂ. ಕೃಷ್ಣಾರೆಡ್ಡಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದರು
ಚಿಂತಾಮಣಿಯ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಂ. ಕೃಷ್ಣಾರೆಡ್ಡಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದರು   

ಚಿಂತಾಮಣಿ: ‘ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೊಸ ತಂತ್ರಜ್ಞಾನಗಳ ಸಂಶೋಧನೆಯಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳು ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಎಂ. ಕೃಷ್ಣಾರೆಡ್ಡಿ ಸಲಹೆ ನೀಡಿದರು.

ನಗರದ ಸರ್ಕಾರಿ ಮಹಿಳಾ ಕಾಲೇಜು, ಸರ್ಕಾರಿ ಬಾಲಕರ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಟ್ಯಾಬ್, ಲ್ಯಾಪ್‌ಟಾಪ್‌ನಂತಹ ಪರಿಕರಗಳು ಅಗತ್ಯ. ಬಹುತೇಕ ವಿದ್ಯಾರ್ಥಿಗಳು ಇವುಗಳನ್ನು ಕೊಳ್ಳುವ ಸ್ಥಿತಿಯಲ್ಲಿ ಇರುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಟ್ಯಾಬ್ ನೀಡುತ್ತಿರುವುದು ಅತ್ಯುತ್ತಮ ಯೋಜನೆಯಾಗಿದೆ. ಕಳೆದ ವರ್ಷ ಕೆಲವರಿಗೆ ಮಾತ್ರ ವಿತರಿಸಲಾಗಿತ್ತು. ಈ ವರ್ಷ ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ವಿತರಿಸುತ್ತಿರುವುದು ಶ್ಲಾಘನೀಯ ಎಂದು
ತಿಳಿಸಿದರು.

ADVERTISEMENT

ವಿದ್ಯಾರ್ಥಿಗಳು ಟ್ಯಾಬ್‌ಗಳನ್ನು ಜೋಪಾನವಾಗಿಟ್ಟುಕೊಂಡು ಪಾಠ ಸೇರಿದಂತೆ ಜ್ಞಾನವೃದ್ಧಿಗಾಗಿ ಮಾತ್ರ ಬಳಸಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನ ಎರಡು ಅಲುಗಿನ ಕತ್ತಿಯಂತೆ. ಒಳ್ಳೆಯದು ಮತ್ತು ಕೆಟ್ಟದ್ದು ಎರಡೂ ಇರುತ್ತದೆ. ವಿದ್ಯಾರ್ಥಿಗಳು ಒಳ್ಳೆಯದಕ್ಕೆ ಮಾತ್ರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಂಶುಪಾಲ ಪ್ರೊ.ಕೆ.ಆರ್. ಶಿವಶಂಕರಪ್ರಸಾದ್, ನಗರಸಭೆ ಸದಸ್ಯರಾದ ಮಂಜುನಾಥ್, ದೇವಳಂ ಶಂಕರ್, ನಟರಾಜ್, ಮುಖಂಡರಾದ ವಿ. ಅಮರ್, ಆಯಿಷಾ ಸುಲ್ತಾನಾ, ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.