ಸಚಿವ ಸಂಪುಟ ಸಭೆ
– ಪ್ರಜಾವಾಣಿ ಚಿತ್ರ
ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ಅಲೀಪುರ ಗ್ರಾಮ ಪಂಚಾಯಿತಿಯು ಪಂಚಾಯಿತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಜಿಲ್ಲೆಯ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗ್ರಾಮ ಮತ್ತು ಪಂಚಾಯಿತಿಯಲ್ಲಿ ಪ್ರಮುಖವಾಗಿರುವ ಅಲೀಪುರವನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮಾಡಬೇಕು ಎನ್ನುವುದು ಇಲ್ಲಿನ ಜನರ ಬಹುದಿನಗಳ ಬೇಡಿಕೆ ಆಗಿತ್ತು.
2011ರ ಜನಗಣತಿ ಅನ್ವಯ ಅಲೀಪುರ ಗ್ರಾಮ ಪಂಚಾಯಿತಿಯು 10,915 ಜನಸಂಖ್ಯೆ ಹೊಂದಿದೆ. 1.89 ಕಿ.ಮೀ ವಿಸ್ತೀರ್ಣ ಮತ್ತು ಪ್ರತಿ ಚದುರ ಕಿ.ಮೀಗೆ 5,775 ಜನಸಾಂದ್ರತೆ ಹೊಂದಿದೆ.
ಗ್ರಾಮದಲ್ಲಿ ಕೃಷಿಯೇತರ ಚಟುವಟಿಕೆಗಳು ಶೇ 62ರಷ್ಟಿವೆ. 2025ರ ಸಾಲಿಗೆ 18,135 ಜನಸಂಖ್ಯೆ ಇರಬಹುದು ಎಂದು ಅಂದಾಜು ಪರಿಗಣಿಸಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾಪಿಸಲಾಗಿತ್ತು ಎಂದು ಸರ್ಕಾರವು ತಿಳಿಸಿದೆ.
ಕಳೆದ ತಿಂಗಳು ಕುಸುಮ್–ಸಿ ಯೋಜನೆಯ ಉದ್ಘಾಟನೆಗಾಗಿ ಗೌರಿಬಿದನೂರಿಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಅಲೀಪುರವನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮಾಡಬೇಕು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಬಹಿರಂಗವಾಗಿ ಕೋರಿದ್ದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಪಟ್ಟಣ ಪಂಚಾಯಿತಿ ಮಾಡಿಕೊಡೋಣ’ ಎಂದು ವೇದಿಕೆಯಲ್ಲಿಯೇ ಘೋಷಿಸಿದರು. ಈಗ ಅಲೀಪುರ ಗ್ರಾಮ ಪಂಚಾಯಿತಿಗೆ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರುವ ಭಾಗ್ಯ ದೊರೆತಿದೆ.
ಗೌರಿಬಿದನೂರು: ‘ಅಲೀಪುರ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪೌರಾಡಳಿತ ಸಚಿವ ರಹೀಮ್ ಖಾನ್ ಅವರ ಬಳಿ ಚರ್ಚಿಸಿದ್ದೆ. ಇಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೆ’ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಇಲ್ಲಿ ಸುಸುಜ್ಜಿತ ಕಟ್ಟಡಗಳು ಶಾಲಾ ಕಾಲೇಜುಗಳು ಆಸ್ಪತ್ರೆಗಳು ಸಿ.ಸಿ ರಸ್ತೆಗಳು ಇವೆ. ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಹೊಂದಿದ. ಇದರಿಂದ ಮೂಲ ಸೌಕರ್ಯಗಳಿಗೆ ಹೆಚ್ಚಿನ ಖರ್ಚು ಆಗುವುದಿಲ್ಲ. ಈ ಎಲ್ಲ ವಿಚಾರವನ್ನು ಗಮನಕ್ಕೆ ತಂದಿದ್ದೆ ಎಂದರು. ಇಲ್ಲಿನ ಜನರು ಪ್ರಪಂಚದ 60 ದೇಶಗಳಲ್ಲಿ ವ್ಯಾಪಾರ ಮಾಡಿ ನಮ್ಮ ಸರ್ಕಾರಕ್ಕೆ ತೆರಿಗೆ ಕಟ್ಟುತ್ತಿದ್ದಾರೆ. ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿರುವುದು ಸಂತೋಷ ತಂದಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.