ಶಿಡ್ಲಘಟ್ಟ: ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಅಂಬೇಡ್ಕರ್ ಭವನ ಹಾಗೂ ಜಗಜೀವನರಾಮ್ ಭವನ ನಿರ್ಮಾಣ ಮಾಡಲು ಉಪ ವಿಭಾಗಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಹಶೀಲ್ದಾರ್ ರಾಜೀವ್ ಅವರಿಗೆ ಸಂಸದ ಎಸ್.ಮುನಿಸ್ವಾಮಿ ಸೂಚಿಸಿದರು.
ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಗುರುವಾರ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಸೇರಿದಂತೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
‘ಡಾ.ಬಿ.ಆರ್. ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾಗಿರುವ ನಾಯಕರಲ್ಲ. ದೇಶಕ್ಕೆ ಸಂವಿಧಾನ ಕೊಟ್ಟಂತಹ ಮಹಾನ್ ವ್ಯಕ್ತಿಯ ಹೆಸರಲ್ಲಿ ಭವನ ನಿರ್ಮಾಣ ಮಾಡಲು ತಾಲ್ಲೂಕು ಆಡಳಿತ ನಗರದ ಹೊರವಲಯದಲ್ಲಿ ಗುರುತಿಸಿರುವ ಜಾಗ ಸರಿಯಿಲ್ಲ’ ಎಂದು ಮುಖಂಡರು ಹೇಳಿದರು.
ತೋಟಗಾರಿಕೆ ಇಲಾಖೆಯ ಆವರಣದಲ್ಲಿಯೇ ಭವನ ನಿರ್ಮಾಣ ಮಾಡಲು ಸ್ಥಳೀಯ ಶಾಸಕರು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದು ಸ್ಥಳ ಮಂಜೂರು ಮಾಡಿಸಲು ಪ್ರಾಮಾಣಿಕ ಯತ್ನ ನಡೆಸಲಾಗುವುದು ಎಂದು ಸಂಸದರು ತಿಳಿಸಿದರು.
‘ಅಗತ್ಯ ಬಿದ್ದಲ್ಲಿ ತೋಟಗಾರಿಕೆ ಇಲಾಖೆಗೆ ಇಲ್ಲಿರುವ ಜಾಗಕ್ಕಿಂತ ದುಪ್ಪಟ್ಟು ಜಾಗವನ್ನು ಬೇರೆಡೆ ನೀಡಲು ಕ್ರಮವಹಿಸಲಾಗುವುದು. 30 ವರ್ಷಗಳಿಂದ ನಗರದ ಹೃದಯಭಾಗದಲ್ಲಿ ಅಂಬೇಡ್ಕರ್ ಭವನ ಹಾಗೂ ಜಗಜೀವನರಾಂ ಭವನ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿರುವ ಎಲ್ಲಾ ದಲಿತ ಸಂಘಟನೆಗಳ ಒಕ್ಕೊರಲ ಅಭಿಪ್ರಾಯದಂತೆ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿಯೇ ನಿರ್ಮಾಣ ಮಾಡಲಾಗುತ್ತದೆ’ ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಎಂ.ರಾಜಣ್ಣ, ತಹಶೀಲ್ದಾರ್ ರಾಜೀವ್, ಸರ್ಕಲ್ ಇನ್ಸ್ಪೆಕ್ಟರ್ ಸುರೇಶ್, ನಗರಸಭೆ ಪೌರಾಯುಕ್ತ ಶ್ರೀನಿವಾಸ್, ದಲಿತ ಮುಖಂಡರಾದ ಗೊಲ್ಲಹಳ್ಳಿ ಶಿವಪ್ರಸಾದ್, ಮೇಲೂರು ಮಂಜುನಾಥ್, ಎನ್.ವೆಂಕಟೇಶ್, ದಡಂಘಟ್ಟ ತಿರುಮಲೇಶ್, ಎಸ್.ಎಂ.ರಮೇಶ್, ದ್ಯಾವಕೃಷ್ಣಪ್ಪ, ಕೃಷ್ಙಮೂರ್ತಿ, ಗುರುಮೂರ್ತಿ, ಈಧರೆ ಪ್ರಕಾಶ್, ನಾಗನರಸಿಂಹ, ದಾಮೋದರ್, ದೇವರಮಳ್ಳೂರು ಕೃಷ್ಣಪ್ಪ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.