ಬಾಗೇಪಲ್ಲಿ: ‘ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲಾ ಸಮುದಾಯದವರಿಗೆ ಸಂವಿಧಾನವೇ ಮಹಾಗ್ರಂಥವಾಗಿದೆ’ ಎಂದು ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಆರ್. ವೆಂಕಟೇಶ್ ತಿಳಿಸಿದರು.
ಪಟ್ಟಣದ ಮುಖ್ಯರಸ್ತೆ ಪಕ್ಕದಲ್ಲಿ ಗುರುವಾರ ಬಿಜೆಪಿ ಜಿಲ್ಲಾ ಎಸ್.ಸಿ ಮೋರ್ಚಾ ಹಾಗೂ ಬಿಜೆಪಿ ಮಂಡಲದಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರಿಗೆ ಇಡೀ ವಿಶ್ವವೇ ಗೌರವ ನೀಡುತ್ತದೆ. ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡದೆ ಎಲ್ಲಾ ಸಮುದಾಯದವರಿಗೂ ಮೀಸಲಾತಿ ನೀಡಿದ್ದಾರೆ ಎಂದರು.
ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆ ವಿರುದ್ಧ ಹೋರಾಟ ಮಾಡಿದ್ದಾರೆ. ಎಲ್ಲರಿಗೂ ಸಮಾನತೆ, ಶಿಕ್ಷಣ, ಉದ್ಯೋಗ ಸಿಗಬೇಕು. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಬಡಜನರು, ಶೋಷಿತರು, ದಲಿತ, ಹಿಂದುಳಿದ, ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಯಡಿ ಸೌಲಭ್ಯ ಕಲ್ಪಿಸಿವೆ. ಜನರು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಟ್ಟಣದ ಬಿಜೆಪಿ ಮಂಡಲದ ಕಚೇರಿಯಿಂದ ನೂರಾರು ಬಿಜೆಪಿ ಕಾರ್ಯಕರ್ತರು ಪಟ್ಟಣದ ಮುಖ್ಯರಸ್ತೆಯಲ್ಲಿ ಅಂಬೇಡ್ಕರ್, ಬಾಬು ಜಗಜೀವನ ರಾಂ ಅವರ ಭಾವಚಿತ್ರಗಳ ಮೆರವಣಿಗೆ ಮಾಡಿದರು.
ಕಾರ್ಯಕ್ರಮದಲ್ಲಿ ಹೊರವರ್ತುಲ ಪ್ರಾಧಿಕಾರದ ಅಧ್ಯಕ್ಷ ಎನ್. ಮುನಿರಾಜು, ಬಿಜೆಪಿ ಮಂಡಲ ಅಧ್ಯಕ್ಷ ಆರ್. ಪ್ರತಾಪ್, ಎಸ್.ಸಿ. ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ನಾಗಪ್ಪ, ರಾಜ್ಯ ಮಹಿಳಾ ಕಾರ್ಯಕಾರಿಣಿ ಸದಸ್ಯೆ ನಿರ್ಮಲಮ್ಮ, ಮಂಜುಳಾ, ಗಂಗುಲಮ್ಮ, ವನಜಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.