ಚಿಕ್ಕಬಳ್ಳಾಪುರ: ಸ್ವಾತಂತ್ರ್ಯ ಸಂಗ್ರಾಮದ 75ನೇ ವರ್ಷದ ಸಂಭ್ರಮದ ಅಂಗವಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮವು ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ಮಾ. 12ರಂದು ನಡೆಯಲಿದೆ.
ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್. ಲತಾ ಅಧ್ಯಕ್ಷತೆಯಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು.
‘ವಿವಿಧ ಕಾರ್ಯಕ್ರಮ, ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಚರಿಸಬೇಕು. ಎಲ್ಲ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು. ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು’ ಎಂದು ಸೂಚಿಸಿದರು.
ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಾ. 12ರಂದು ಚಾಲನೆ ನೀಡುವರು. ದೇಶದಾದ್ಯಂತ ಆಯ್ದ 75 ಸ್ಥಳಗಳಲ್ಲಿ ಕಾರ್ಯಕ್ರಮ ಜರುಗಲಿದೆ. ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥವನ್ನು ಆಯ್ಕೆ ಮಾಡಲಾಗಿದೆ ಎಂದರು.
ಅಂದು ಬೆಳಿಗ್ಗೆ 7.30ರಿಂದ ವಿದುರಾಶ್ವತ್ಥದ ವೀರಸೌಧ ಸ್ಮಾರಕ ಪಕ್ಕದಲ್ಲಿ ಯೋಗಾಸನ, 8.30ರಿಂದ ಗೌರಿಬಿದನೂರಿನಿಂದ-ವಿದುರಾಶ್ವತ್ಥ ಮಾರ್ಗವಾಗಿ ಸೈಕಲ್ ರ್ಯಾಲಿ, 9.30ಕ್ಕೆ ಸ್ವಾತಂತ್ರ್ಯ ಸ್ಮಾರಕಕ್ಕೆ ಗೌರವ ಸಮರ್ಪಣೆ, 10ರಿಂದ 11ರವರೆಗೆ ವೇದಿಕೆ ಕಾರ್ಯಕ್ರಮ, 11ರಿಂದ 11.30ರವರಿಗೆ ಕರ್ನಾಟಕ ಜಲಿಯನ್ ವಾಲಾಬಾಗ್ ಸ್ವಾತಂತ್ರ್ಯ ಸಂಗ್ರಾಮದ ಕಿರುಚಿತ್ರ ವೀಕ್ಷಣೆ, ಭಾರತ ಸ್ವಾತಂತ್ರ್ಯ ಸಂಗ್ರಾಮದ ವಿರಾಟ್ ಚಿತ್ರ-ಇತಿಹಾಸ ದರ್ಶನ, ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಕಾರ್ಯಕ್ರಮದ ಪ್ರಯುಕ್ತ ಶಾಲಾ ಹಾಗೂ ಕಾಲೇಜು ಹಂತದಲ್ಲಿ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಗಳನ್ನು ನಡೆಸಬೇಕು. ಶಾಲಾ, ಕಾಲೇಜುಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ವಿಚಾರ ಸಂಕಿರಣ ಹಾಗೂ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಕಂದಾಯ ಹೋಬಳಿ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮಗಳ ಮೇಲುಸ್ತುವಾರಿಗೆ ಉಪ ವಿಭಾಗಾಧಿಕಾರಿ ಎ.ಎನ್. ರಘುನಂದನ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯಕ್ರಮದ ವಿವಿಧ ಜಬಾಬ್ದಾರಿಗಳನ್ನು ನೀಡಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ಕುಮಾರ್, ಡಿಡಿಪಿಐ ಜಯರಾಮರೆಡ್ಡಿ, ಡಿಡಿಪಿಯು ಗೀತಾ, ಗೌರಿಬಿದನೂರು ತಹಶೀಲ್ದಾರ್ ಶ್ರೀನಿವಾಸ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಹಾಗೂ ಇತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.