
ಚಿಕ್ಕಬಳ್ಳಾಪುರ: ಯಾವುದೇ ಶಿಫಾರಸು, ರಾಜಕೀಯ ಒತ್ತಡ ಇಲ್ಲದೆ ಅವರು ಪಡೆದ ಅಂಕಗಳು ಹಾಗೂ ಅರ್ಹತೆಗಳ ಅನ್ವಯ ಜಿಲ್ಲೆಯಲ್ಲಿ 31 ಅಂಗನವಾಡಿ ಕಾರ್ಯಕರ್ತೆಯರು, 163 ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಗುರುವಾರ ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಹೊಸದಾಗಿ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಣೆ ಹಾಗೂ ವಿವಿಧ ಇಲಾಖಾ ಸೌಲಭ್ಯ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಅಂಗನವಾಡಿ ಸಿಬ್ಬಂದಿ ನೇಮಕದ ಬಗ್ಗೆ ಈ ಹಿಂದೆ ಬಹಳ ತಾತ್ಸರ ಇತ್ತು. ಆ ಕೆಲಸವನ್ನು ನಾವೇಕೆ ಮಾಡಬೇಕು ಎಂಬ ಭಾವನೆ ಇತ್ತು. ಪ್ರಸ್ತುತ ಆ ಭಾವನೆ ಬದಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಬೇಡಿಕೆ ಇದೆ. ಅದೇ ರೀತಿ ಸ್ಪರ್ಧೆಯು ಇದೆ. ಆಯ್ಕೆ ಬಯಸುವ ಅಭ್ಯರ್ಥಿಗಳು ಗಳಿಸಿದ ವಿದ್ಯಾರ್ಹತೆಯ ಅಂಕಗಳು ಹಾಗೂ ಸ್ಥಳೀಯ ವಾಸದ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ’ ಎಂದು ಹೇಳಿದರು.
ನೇಮಕಾತಿ ಆಗಿರುವ ತಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಸರ್ಕಾರದ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಅಂಗನವಾಡಿಗಳಿಗೆ ಬರುವ ಕಾರ್ಮಿಕರ ಮಕ್ಕಳು, ಬಡವರ ಮಕ್ಕಳ ಬೆಳವಣಿಗೆಗೆ ಶಕ್ತಿ ತುಂಬಬೇಕು. ಮಕ್ಕಳಿಗೆ ತಾಯಿ ನಂತರದ ಪಾಠಶಾಲೆಯ ಅನುಭವವನ್ನು ಕೊಡುವವರೇ ಅಂಗನವಾಡಿ ಕಾರ್ಯಕರ್ತೆಯರು, ಆದ್ದರಿಂದ ತಮಗೆ ನಿಯೋಜಿತವಾಗಿರುವ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಿ ಸಮಾಜದ ಅಭಿವೃದ್ಧಿಗೆ ಪಾತ್ರರಾಗಬೇಕು ಎಂದು ಕಿವಿಮಾತು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ 3ನೇ ವರ್ಷದಿಂದ ನರ್ಸರಿ ಮಾದರಿಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂಬ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಇದರ ಭಾಗವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಯೋಗಿಕವಾಗಿ ಅಂಗನವಾಡಿಗಳನ್ನು ಉನ್ನತೀಕರಿಸಿ ಮಾಂಟೆಸೆರಿ ಹಾಗೂ ನರ್ಸರಿ ಮಾದರಿಯಲ್ಲಿ ಶಿಕ್ಷಣ ನೀಡುವ ಪ್ರಯತ್ನ ನಡೆಯುತ್ತಿದೆ. ಇದರ ಸಾಧಕ ಬಾಧಕಗಳ ಬಗ್ಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಪರಿಶೀಲಿಸುವ ಅಗತ್ಯವಿದೆ. ಈ ರೀತಿಯ ಶಿಕ್ಷಣ ಪದ್ದತಿ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಅಂಗನವಾಡಿಗಳ ಸ್ವರೂಪವೇ ಬದಲಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಉನ್ನತ ಜಾತಿಯವರು, ಕೆಳಜಾತಿಯವರ ಮನೆಗಳಿಗೆ ಪರಸ್ಪರ ಪ್ರವೇಶ ಮಾಡದಿರುವ ಪರಿಸ್ಥಿತಿ ಇನ್ನೂ ಕೆಲವೆಡೆ ಜೀವಂತವಾಗಿದೆ. ಇಂತಹ ಅನಿಷ್ಟ ಜಾತಿ ಪದ್ಧತಿಯನ್ನು ತೊಡೆದು ಹಾಕಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಕಂಕಣ ಬದ್ದರಾಗಿ ಕೆಲಸ ಮಾಡಬೇಕು. ಜಾತಿ ಪದ್ಧತಿಯನ್ನು ಕಿತ್ತೆಸೆಯುವಂತಹ ಕೆಲಸವನ್ನು ಮಾಡಬೇಕು ಎಂದರು.
ಅಂಗನವಾಡಿಯ ಸೌಲಭ್ಯಗಳನ್ನು ಯಾವುದೇ ಅಸಮಾನತೆ, ತಾರತಮ್ಯ ಮಾಡದೆ ಅರ್ಹ ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯವನ್ನು ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಂತರ್ಜಾತಿ ವಿವಾಹವಾದ 54 ಜೋಡಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನ, ನೂತನ ಫಲಾನುಭವಿಗಳಿಗೆ ಪಡಿತರ ಚೀಟಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.
ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ತಹಶೀಲ್ದಾರ್ ರಶ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶರೆಡ್ಡಿ ಹಾಗೂ ವಿವಿಧ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಸ್ವಂತ ನಿವೇಶನಕ್ಕೆ ಕ್ರಮ
ತಂತ್ರಜ್ಞಾನವನ್ನು ಬಳಸಿಕೊಂಡು ಮಕ್ಕಳಿಗೆ ಉನ್ನತ ಜ್ಞಾನ ನೀಡಲು ಇಂದು ಸಾಕಷ್ಟು ಅವಕಾಶಗಳಿವೆ. ಆ ದಿಸೆಯಲ್ಲಿ ಜಿಲ್ಲೆಯಲ್ಲಿ ಇಂದು 730 ಸಕ್ಷಮ ಅಂಗನವಾಡಿಗಳಿಗೆ ಎಲ್.ಇ.ಡಿ ಸ್ಮಾರ್ಟ್ ಟಿ.ವಿ ವಿತರಣೆ ಮಾಡಲಾಗುತ್ತಿದೆ. ಜೊತೆಗೆ 750 ನೀರು ಶುದ್ದೀಕರಣದ ಘಟಕಗಳನ್ನು ವಿತರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ 320 ಅಂಗನವಾಡಿಗಳಿಗೆ ಸ್ವಂತ ನಿವೇಶನ ನೀಡಲು ಜಿಲ್ಲಾಡಳಿತ ತುರ್ತು ಕ್ರಮ ತೆಗೆದುಕೊಂಡು ಕಾರ್ಯೋನ್ಮುಖವಾಗಿದೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.