ADVERTISEMENT

ಬಾಗೇಪಲ್ಲಿ: ಕೃಷಿ ಕಾರ್ಮಿಕರ ವಿರೋಧ ನೀತಿಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 3:09 IST
Last Updated 6 ಸೆಪ್ಟೆಂಬರ್ 2020, 3:09 IST
ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಕೃಷಿ ಕೂಲಿ ಕಾರ್ಮಿಕರ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಕೂಲಿಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು
ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಕೃಷಿ ಕೂಲಿ ಕಾರ್ಮಿಕರ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಕೂಲಿಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು   

ಬಾಗೇಪಲ್ಲಿ: ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಬೇಕು, ಜನದ್ರೋಹಿ ತಿದ್ದುಪಡಿ ಕಾಯ್ದೆಗಳನ್ನು ಕೈ ಬಿಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ, ಸಿಐಟಿಯು, ಪ್ರಾಂತ ಕೃಷಿ ಕೂಲಿಕಾರರ ಸಂಘ ತಾಲ್ಲೂಕು ಸಮಿತಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇದಕ್ಕೂ ಮುನ್ನ ಪಟ್ಟಣದ ಸುಂದರಯ್ಯ ಭವನದಿಂದ ಹೊರಟ ಕೃಷಿ ಕೂಲಿ ಕಾರ್ಮಿಕರು ಪಟ್ಟಣದ ಮುಖ್ಯರಸ್ತೆಯ ಮೂಲಕ ಡಾ.ಎಚ್.ಎನ್.ವೃತ್ತದವರೆಗೂ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು.

ಈ ವೇಳೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ‘ಕೃಷಿ ಕೂಲಿ ಕಾರ್ಮಿಕರ ಬದುಕಿಗೆ ಆಸರೆಯಾಗಿರುವ ನರೇಗಾ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ತಾಲ್ಲೂಕಿನ ನಾರೇಮದ್ದೇಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಕೂಲಿ ಕೆಲಸದ ₹12 ಲಕ್ಷ ಹಣವನ್ನು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೂಲಿಕಾರರಿಗೆ ಕೂಲಿ ಹಣ ವಿತರಿಸಿಲ್ಲ’ ಎಂದು ಆರೋಪಿಸಿದರು.

ADVERTISEMENT

ತಾಲ್ಲೂಕು ಕಾರ್ಯದರ್ಶಿ ಪಿ.ಮಂಜುನಾಥರೆಡ್ಡಿ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿ ಕೂಲಿ ಕಾರ್ಮಿಕರ ವಿರೋಧಿ ನೀತಿಗಳನ್ನು ಜಾರಿ ಮಾಡಲು ಹೊರಟಿದೆ. ಭೂ ಸುಧಾರಣಾ, ಎಪಿಎಂಸಿ, ವಿದ್ಯುತ್ ಸುಗ್ರೀವಾಜ್ಞೆಗಳ ತಿದ್ದುಪಡಿಗಳನ್ನು ಮಾಡಿ ರೈತರ ಜಮೀನು ಪಡೆದು, ಕಾರ್ಪೋರೇಟ್ ಕಂಪೆನಿಗಳಿಗೆ ಮಾರಾಟ ಮಾಡಲು ಹೊರಟಿದೆ’ ಎಂದು ಆರೋಪಿಸಿದರು.

ಈ ವೇಳೆ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಜಯರಾಮರೆಡ್ಡಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ಎ.ಎನ್.ಶ್ರೀರಾಮಪ್ಪ, ಕೂಲಿಕಾರರ ಸಂಘಟನೆಯ ರಾಜ್ಯ ಸಮಿತಿ ಸದಸ್ಯೆ ಬಿ.ಸಾವಿತ್ರಮ್ಮ, ಸಿಐಟಿಯು ತಾಲ್ಲೂಕು ಅಧ್ಯಕ್ಷ ಬಿ.ಆಂಜನೇಯರೆಡ್ಡಿ, ಕಾರ್ಯದರ್ಶಿ ಜಿ.ಮುಸ್ತಾಫ, ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀರಾಮನಾಯಕ್, ಮುಖಂಡರಾದ ಎಂ.ಎನ್.ರಘುರಾಮರೆಡ್ಡಿ, ಎಚ್.ಎ.ರಾಮಲಿಂಗಪ್ಪ, ಜೈನಾಭಿ ಇದ್ದರು.

ಪ್ರತಿ ಕುಟುಂಬಕ್ಕೆ ₹7,500 ನೀಡಿ

‘ಲಾಕ್‌ಡೌನ್‌ನಿಂದ ಕೋಟ್ಯಂತರ ಕೃಷಿ ಕೂಲಿ ಕಾರ್ಮಿಕರು ಕಷ್ಟ ಅನುಭವಿಸಿದರು. ಪ್ರತಿಯೊಬ್ಬರ ತಿಂಗಳ ಆದಾಯ ಕಡಿಮೆ ಆಗಿದೆ. ಪ್ರತಿ ಕುಟುಂಬಕ್ಕೆ ಸರ್ಕಾರಗಳು ₹7,500 ನೀಡಬೇಕು. ಶ್ರೀಮಂತರ ಸಾಲಗಳನ್ನು ಮನ್ನಾ ಮಾಡುವ ಸರ್ಕಾರಗಳು, ಕೃಷಿ ಕೂಲಿ ಕಾರ್ಮಿಕರಿಗೆ ಕನಿಷ್ಠ ಪಡಿತರ, ಆರೋಗ್ಯ, ಉದ್ಯೋಗಗಳನ್ನು ಏಕೆ ಕಲ್ಪಿಸಿಲ್ಲ? ಎಂದು ಸಿಪಿಎಂ ಮುಖಂಡ ಡಾ.ಅನಿಲ್ ಕುಮಾರ್ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.