ADVERTISEMENT

ಚಿಕ್ಕಬಳ್ಳಾಪುರ: ಅಕ್ರಮ ಗಣಿಗಾರಿಕೆ ತಡೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 4:43 IST
Last Updated 17 ಜುಲೈ 2021, 4:43 IST
ಕೆಆರ್‌ಎಸ್ ಸುತ್ತ ಅಕ್ರಮ ಗಣಿಗಾರಿಕೆಗೆ ತಡೆ ನೀಡುವಂತೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಟವಳೆ) ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು
ಕೆಆರ್‌ಎಸ್ ಸುತ್ತ ಅಕ್ರಮ ಗಣಿಗಾರಿಕೆಗೆ ತಡೆ ನೀಡುವಂತೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಟವಳೆ) ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು   

ಚಿಕ್ಕಬಳ್ಳಾಪುರ: ಕೆಆರ್‌ಎಸ್ ಸುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಬೇಕು. ಇದರಲ್ಲಿ ಭಾಗಿಯಾದ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಟವಳೆ) ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಅವರ ಮೂಲಕ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕೆಆರ್‌ಎಸ್ ಅಣೆಕಟ್ಟೆಯ ಬಿರುಕು ಎನ್ನುವ ಮಾತಿನೊಂದಿಗೆ ಆರಂಭವಾದ ವಿವಾದ ಈಗ ಅಕ್ರಮ ಗಣಿಗಾರಿಕೆಯ ವಿಚಾರವನ್ನು ಮುನ್ನೆಲೆಗೆ ತಂದಿದೆ. ಸಂಸದೆ ಸುಮಲತಾ ಅಂಬರೀಷ್ ಅವರ ಹೋರಾಟವನ್ನು ಪಕ್ಷ ಬೆಂಬಲಿಸಲಿದೆ. ಕೆಆರ್‌ಎಸ್ ಬಿರುಕಿಗೆ ಅಡ್ಡಲಾಗಿ ಸುಮಲತಾ ಅವರನ್ನು ಮಲಗಿಸಬೇಕು ಎಂದು ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳಿರುವುದು ಖಂಡನೀಯ. ಇದಕ್ಕಾಗಿ ಕುಮಾರಸ್ವಾಮಿ ಬಹಿರಂಗ ಕ್ಷಮೆ ಕೇಳಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದೊಂದು ಚಿಲ್ಲರೆ ಪ್ರಚಾರ ಎಂದಿರುವುದೂ ಸಹ ಖಂಡನಾರ್ಹ.

ಎಚ್‌.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ಅಕ್ರಮ ಗಣಿಗಾರಿಕೆಗೆ ಬೆಂಬಲವಾಗಿ ನಿಂತಂತೆ ಕಾಣುತ್ತಿದೆ. ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ಥಳ ಪರಿಶೀಲಿಸಬೇಕು. ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರನ್ನು ನೇಮಿಸಬೇಕು. ಪರಿಸರ ತಜ್ಞರ ಸಮಿತಿ ರಚಿಸಿ ಅಕ್ರಮ ಗಣಿಗಾರಿಕೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಕಾರ್ಯಕರ್ತರು
ಕೋರಿದರು.

ADVERTISEMENT

ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡಬಾರದು. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳನ್ನು ಪತ್ತೆ ಮಾಡಿ ಈ ದಂಧೆಗೆ ಕಡಿವಾಣ ಹಾಕಬೇಕು. ಈ ಬಗ್ಗೆ ಕ್ರಮಕೈಗೊಳ್ಳದಿದ್ದರೆ ಪಕ್ಷದ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡುವರು ಎಂದು ಮನವಿಯಲ್ಲಿ
ತಿಳಿಸಿದ್ದಾರೆ.

ಆರ್‌ಪಿಐ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸಿ. ವೆಂಕಟರಮಣಪ್ಪ, ಉಪಾಧ್ಯಕ್ಷ ಈಶ್ವರಪ್ಪ, ದಸಂಸ (ಭೀಮಮಾರ್ಗ) ಜಿಲ್ಲಾ ಅಧ್ಯಕ್ಷ ವೆಂಕಟ್, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಹರಿಪ್ರಸಾದ್, ಜಿ.ಕೆ. ಮುರಳೀಧರ್, ಶಿವಕುಮಾರ್, ಮಹೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.