ಗೌರಿಬಿದನೂರು: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಗ್ರಾಮೀಣ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ನೆರವಿಗೆ ಸರ್ಕಾರ ಹಾಗೂ ಸಂಘ, ಸಂಸ್ಥೆಗಳು ಮುಂದಾಗಬೇಕು ಎಂದು ಮುಖಂಡ ಜಕ್ಕೇನಹಳ್ಳಿ ಆರ್. ವೆಂಕಟಾಚಲ ತಿಳಿಸಿದರು.
ತಾಲ್ಲೂಕಿನ ಇಡಗೂರು ಗ್ರಾಮದ ಶ್ರೀಭೀಮೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಿ ಅವರು ಮಾತನಾಡಿದರು.
ಕೊರೊನಾ ಸಂಕಷ್ಟದಿಂದಾಗಿ ಬಡ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಕುಟುಂಬಗಳ ನಿರ್ವಹಣೆ ಕಷ್ಟವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತೆಗೀಡಾಗಿದ್ದಾರೆ. ಆದ್ದರಿಂದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ನೆರವಿಗೆ ಸಮಾಜದಲ್ಲಿರುವ ಸ್ಥಿತಿವಂತರು, ಸಂಘ, ಸಂಸ್ಥೆಗಳು ಸರ್ಕಾರದ ಜೊತೆಗೆ ಕೈಜೋಡಿಸಬೇಕು. ತಮ್ಮ ಕೈಲಾದಷ್ಟು ನೆರವು ಒದಗಿಸಬೇಕು ಎಂದು ಹೇಳಿದರು.
ಗ್ರಾ.ಪಂ ಅಧ್ಯಕ್ಷ ಜಯರಾಮ್ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ದಾನಿಗಳು ನೆರವು ಒದಗಿಸುತ್ತಿದ್ದಾರೆ. ನೆರವು ಪಡೆದು ಮಕ್ಕಳು ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಬೇಕು ಎಂದರು.
ಮುಖ್ಯಶಿಕ್ಷಕ ಆದಿನಾರಾಯಣಪ್ಪ, ಶಿಕ್ಷಕರಾದ ಎಂ. ನಟರಾಜ್, ರಂಗನಾಥ್, ಪದ್ಮಪ್ರಭ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.