ಚಿಕ್ಕಬಳ್ಳಾಪುರ: ‘ಎಚ್ಐವಿ ಸೋಂಕು ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ತಿಳಿಸಿದರು.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣಾ ಘಟಕ, ಜಿಲ್ಲಾ ಕ್ಷಯರೋಗ ನಿಯಂತ್ರಣಾ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ರೆಡ್ ರಿಬ್ಬನ್ ಕ್ಲಬ್, ಸ್ವಯಂಸೇವಾ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಜಾಥಾ ಮೂಲಕ ಏಡ್ಸ್ ಮತ್ತುಎಚ್ಐವಿ ಸೋಂಕು ತಡೆಗೆ ಜಾಗೃತಿ ಮೂಡಿಸಬೇಕು. ಏಡ್ಸ್ ರೋಗ ತಡೆಗಟ್ಟಲು ಆರೋಗ್ಯ ಇಲಾಖೆ ಹಮ್ಮಿಕೊಳ್ಳಲಾಗುವ ಮುನ್ನೆಚ್ಚರಿಕಾ ಕ್ರಮಗಳಿಗೆ ಸಾರ್ವಜನಿಕರು ಸ್ಪಂದಿಸಬೇಕು. ಮುಂಜಾಗ್ರತೆ ವಹಿಸಿದರೆ ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯ ಎಂದು ಹೇಳಿದರು.
ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿ, ಎಚ್ಐವಿ ವೈರಾಣು ಮಾನವನ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಈ ವೈರಾಣು ಮಾನವನ ಶರೀರದಲ್ಲಿ ಮಾತ್ರ ಬದುಕಬಲ್ಲದು. ಹಾಗಾಗಿ, ರೋಗ ಹರಡದಂತೆ ಎಚ್ಚರವಹಿಸಬೇಕಾಗಿದೆ. ಇಂತಹ ಕಾರ್ಯಕ್ರಮಗಳಿಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ಲಭ್ಯವಿದ್ದು, ಇದರ ಪ್ರಯೋಜನೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಚ್. ದೇವರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್. ಕಬಾಡೆ, ಜಿಲ್ಲಾ ಕ್ಷಯರೋಗ ಮತ್ತು ಏಡ್ಸ್ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರಮೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹರೀಶ್ ಕುಮಾರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.