ADVERTISEMENT

ಜಿಲ್ಲಾ ನ್ಯಾಯಾಲಯದಲ್ಲಿ ಜಾಗೃತಿ ಸಭೆ

ಆರೋಗ್ಯ ಇಲಾಖೆಯಿಂದ ಕೋರ್ಟ್‌ಗೆ ಬರುವವರ ತಪಾಸಣೆಗೆ ವೈದ್ಯಕೀಯ ತಂಡ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 13:05 IST
Last Updated 17 ಮಾರ್ಚ್ 2020, 13:05 IST
ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಆರೋಗ್ಯ ತಪಾಸಣಾ ಕಾರ್ಯಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ಚಾಲನೆ ನೀಡಿದರು.
ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಆರೋಗ್ಯ ತಪಾಸಣಾ ಕಾರ್ಯಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ಚಾಲನೆ ನೀಡಿದರು.   

ಚಿಕ್ಕಬಳ್ಳಾಪುರ: ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಕೊರೊನಾ ವೈರಸ್ ಸೋಂಕು ಹರಡುವುದು ತಡೆಗಟ್ಟುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಕೀಲರು, ಕಕ್ಷಿದಾರರಿಗೆ ಅರಿವು ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ, ‘ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರತಿದಿನ ನೂರಾರು ಕಕ್ಷಿದಾರರು ಬರುವುದರಿಂದ ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಮಾರಣಾಂತಿಕ ಸೋಂಕಿನಿಂದ ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕಕ್ಷಿದಾರರಿಗೆ ಅರಿವು ಮೂಡಿಸಲಾಯಿತು’ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ ಮಾತನಾಡಿ, ‘ನ್ಯಾಯಾಲಯಕ್ಕೆ ಬರುವವರಿಗೆ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ತಪಾಸಣೆ ನಡೆಸಲು ಜಿಲ್ಲಾ ಸರ್ವೇಕ್ಷಣಾ ಸಮಿತಿ ವತಿಯಿಂದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ. ನ್ಯಾಯಾಲಯದಲ್ಲಿ ನಾಲ್ಕು ದಿನಗಳ ಕಾಲ ತಪಾಸಣೆ ಮಾಡುವುದು ಮಾತ್ರವಲ್ಲದೆ ಕೊರೊನಾ ಸೋಂಕಿನಿಂದ ರಕ್ಷಿಸಿಕೊಳ್ಳುವ ಬಗ್ಗೆ ತಿಳುವಳಿಕೆ ಕೂಡ ನೀಡಲಾಗುತ್ತದೆ’ ಎಂದು ತಿಳಿಸಿದರು.

ADVERTISEMENT

‘ಕೊರೊನಾ ವೈರಸ್ ಸೋಂಕು 14 ದಿನಗಳ ನಂತರ ಕಾಣಿಸಿಕೊಳ್ಳುತ್ತದೆ. ನಿರಂತರ ಕೆಮ್ಮು, ನೆಗಡಿ ಹಾಗೂ ಜ್ವರ ಕಾಣಿಸಿಕೊಂಡು ಭೇದಿಯಾಗುತ್ತದೆ. ಜತೆಗೆ ಉಸಿರಾಟಕ್ಕೆ ತೊಂದರೆಯಾಗುತ್ತದೆ. ಈ ಲಕ್ಷಣಗಳು ಕಂಡು ಬಂದಾಗ ತಕ್ಷಣ ವೈದ್ಯಾಧಿಕಾರಿಗಳನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಳ್ಳಬೇಕು. ಜನರು ಪ್ರಸ್ತುತ ಸಂದರ್ಭದಲ್ಲಿ ಬಿಸಿಯಾಗಿರುವ ಆಹಾರ ಪದಾರ್ಥಗಳನ್ನು ಸೇವಿಸಬೇಕು. ಬೀದಿಬದಿಯಲ್ಲಿ ತಿಂಡಿಗಳನ್ನು ತಿನ್ನಬಾರದು. ನೆರೆಹೊರೆಯವರಲ್ಲಿಯೂ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಬೇಕು’ ಎಂದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಎನ್.ರೂಪಾ, ಎಚ್. ದೇವರಾಜು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅನಿಲ್ ಕುಮಾರ್, ನಿವಾಸಿ ವೈದ್ಯಾಧಿಕಾರಿ ಡಾ.ರಮೇಶ್, ನಗರಸಭೆ ಆಯುಕ್ತ ಲೋಹಿತ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.